ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಇದಕ್ಕೆ ಕೆಲ ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಲೇಜು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು. ಇದರಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಮೂಲಕ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಚಿತ್ರದುರ್ಗ ಜಿಲ್ಲೆಗೂ ಕಾಲಿಟ್ಟಿತು.
ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳನ್ನು ಕಾಲೇಜು ಸಿಬ್ಬಂದಿ ಪ್ರವೇಶ ದ್ವಾರದಲ್ಲಿ ತಡೆದರು. ಇದಕ್ಕೆ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು. ಹಿಜಾಬ್ ಧರಿಸಿಬಂದವರಿಗೂ ಪ್ರವೇಶ ನೀಡಲಿಲ್ಲ.
ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇದರಿಂದ ಎರಡು ತರಗತಿಗಳನ್ನು ರದ್ದುಪಡಿಸಿ ಪ್ರಾಂಶುಪಾಲ ಮಂಜುನಾಥ್ ಘೊಷಣೆ ಮಾಡಿದರು. ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದರು.