ಚಿತ್ರದುರ್ಗ: ಸ್ವಾತಂತ್ರ್ಯದ 75 ವರ್ಷಗಳ ಅಮೃತ ಮಹೋತ್ಸವ ಕಾರ್ಯಕ್ರಮ ಐತಿಹಾಸಿಕ ಚಿತ್ರದುರ್ಗ ನಗರ ಸೇರಿ ದೇಶದ 75 ಸ್ಥಳಗಳಲ್ಲಿ ಆಯೋಜಿಸಲಾಗುತ್ತಿದೆ. ಜಿಲ್ಲೆಗೆ ಇದೊಂದು ಹೆಮ್ಮೆಯ ಸಂಗತಿ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಭಿಪ್ರಾಯಪಟ್ಟರು.
ಇಲ್ಲಿನ ಕೋಟೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಸ್ವಾತಂತ್ರ್ಯಕ್ಕಾಗಿ ದೇಶದ ಹಳ್ಳಿ-ಹಳ್ಳಿಗಳಲ್ಲೂ ಹೋರಾಟ ನಡೆದಿದೆ. ಸ್ವಾತಂತ್ರ್ಯ ಹೋರಾಟಗಾರರ ದೇಶಭಕ್ತಿ, ತ್ಯಾಗ ಮತ್ತು ಬಲಿದಾನ ಸ್ಮರಿಸುವ ಅಗತ್ಯವಿದೆ. ಕಲೆ, ಸಂಸ್ಕೃತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವುದು ಎಲ್ಲರ ಜವಾಬ್ದಾರಿ. ಮಹೋತ್ಸವವನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಬೇಕಿದೆ’ ಎಂದು ಹೇಳಿದರು.
ನೆಹರೂ ಯುವ ಕೇಂದ್ರದ ರಾಜ್ಯ ನಿರ್ದೇಶಕ ಅತುಲ್ ಜೆ. ನಿಕ್ಕಂ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ಸಾಬರಮತಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸ ಸ್ಮರಿಸಬೇಕಿದೆ’ ಎಂದರು.
ಸ್ಮರಣೋತ್ಸದ ಅಂಗವಾಗಿ ದೇಶ ಭಕ್ತಿ ಮತ್ತು ದೇಶ ನಿರ್ಮಾಣ ವಿಷಯದ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ರಾಷ್ಟ್ರೀಯ ಭಾವೈಕ್ಯ ಮತ್ತು ಕೋಮುಸೌರ್ಹದತೆ ಕುರಿತು ಪ್ರಬಂಧ ಸ್ಪರ್ಧೆ ನಡೆಸಲಾಯಿತು. ಸ್ವಾತಂತ್ರ್ಯ ಚಳುವಳಿ ಕುರಿತು ಚಿತ್ರಕಲಾ ಸ್ಪರ್ಧೆ, ಪರಾಂಪರಿಕ ನಡಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ನೆಹರೂ ಯುವ ಕೇಂದ್ರದ ಉಪನಿರ್ದೇಶಕ ಡಿ.ದಯಾನಂದ್, ಪುರಾತತ್ವ ಇಲಾಖೆಯ ಅಧೀಕ್ಷಕ ಶಿವಕಾಂತ್, ಎಂಜಿನಿಯರ್ ಜೆ.ರಂಗನಾಥ್, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಎನ್. ಸುಹಾಸ್ ಇದ್ದರು.