ಚಿತ್ರದುರ್ಗ: ‘ಸ್ವಾತಂತ್ರ್ಯಕ್ಕೂ ಮುನ್ನ ಭಾರತೀಯರ ಮುಂದೆ ಅನೇಕ ಸವಾಲುಗಳಿದ್ದವು. ಆದರೆ, ಇಂದು ಬಲಿಷ್ಠ, ಸಮೃದ್ಧ ಭಾರತ ನಿರ್ಮಾಣಕ್ಕಾಗಿ ನಮ್ಮೆಲ್ಲರ ಮೇಲೂ ಜವಾಬ್ದಾರಿ ಹೆಚ್ಚಿದೆ’ ಎಂದು ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ಎಸ್ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಗುರುವಾರ ಎಸ್ಜೆಎಂ ವಿದ್ಯಾಪೀಠದಿಂದ ನಡೆದ 73ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಅವರು ಮಾತನಾಡಿದರು.
‘ಸ್ವಾತಂತ್ರ್ಯ ದಿನಾಚರಣೆ ಶಿಸ್ತಿನ ಆಚರಣೆಯಾಗಿದೆ. ಅದನ್ನು ಸಂತೋಷವಾಗಿ ಆಚರಿಸುತ್ತಿದ್ದೇವೆ. ದೇಶದ ಪ್ರತಿಯೊಬ್ಬ ಪ್ರಜೆಯೂ ವಿದ್ಯಾವಂತರಾಗಬೇಕು. ಎಲ್ಲ ರಂಗಕ್ಕೂ ಶಿಕ್ಷಣದ ಅಗತ್ಯವಿದ್ದು, ಎಲ್ಲರಿಗೂ ಅವಕಾಶಗಳು ದೊರೆಯುವ ವಾತಾವರಣ ನಿರ್ಮಾಣವಾಗಬೇಕು. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಶಕ್ತಿಯೂ ನಮ್ಮಲ್ಲಿ ಇರಬೇಕು’ ಎಂದು ತಿಳಿಸಿದರು.
ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಕ ನಿರ್ದೇಶಕರಾದ ಡಾ.ಚಿತ್ರಶೇಖರ್, ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಆಡಳಿತ ಮಂಡಳಿ ಸದಸ್ಯೆ ರುದ್ರಾಣಿ ಗಂಗಾಧರ್ ಇದ್ದರು.
ಎಸ್ಜೆಎಂ ಸಂಸ್ಥೆಯ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳ 23 ತಂಡಗಳು ಪಥ ಸಂಚಲನ ನಡೆಸಿದವು.