ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1,600 ಟನ್‌ ಆಮ್ಲಜನಕಕ್ಕೆ ಕೋರಿಕೆ: ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌

Last Updated 6 ಮೇ 2021, 12:08 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಜ್ಯಕ್ಕೆ ಪೂರೈಕೆ ಆಗುವ 800 ಟನ್‌ ವೈದ್ಯಕೀಯ ಆಮ್ಲಜನಕದ ಪ್ರಮಾಣವನ್ನು 1,600 ಟನ್‌ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ. ಕೇಂದ್ರ ಸಚಿವ ಪೀಯೂಷ್‌ ಗೋಯಲ್‌ ಹಾಗೂ ಪ್ರಹ್ಲಾದ್‌ ಜೋಶಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದರು.

ಭದ್ರಾವತಿಗೆ ತೆರಳುತ್ತಿದ್ದ ಅವರು ಮಾರ್ಗಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೊರೊನಾ ಸೋಂಕು ಏಕಾಏಕಿ ಹೆಚ್ಚಳ ಆಗಿದ್ದರಿಂದ ಸಮಸ್ಯೆ ಉಂಟಾಗಿದೆ. ಆಮ್ಲಜನಕಕ್ಕೆ ಬೇಡಿಕೆ ಅಧಿಕವಾಗಿದೆ. ಹೆಚ್ಚುವರಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಭದ್ರಾವತಿಯ ಬಲ್ಡೋಟ ಕಂಪನಿಯ ಆಮ್ಲಜನಕ ಉತ್ಪಾದನಾ ಘಟಕದ ಪುನರಾರಂಭಕ್ಕೆ ಪ್ರಯತ್ನಿಸಲಾಗುತ್ತಿದೆ’ ಎಂದರು.

‘ಆಮ್ಲಜನಕದ ಕೊರತೆ ನೀಗಿಸಲು ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ರೆಮ್‌ಡಿಸಿವಿರ್‌ ಚುಚ್ಚುಮದ್ದು ಕೊರತೆಯೂ ನೀಗಲಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೋವಿಡ್‌ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು’ ಎಂದು ಹೇಳಿದರು.

‘ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಗಮನ ಸೆಳೆದಿದ್ದಾರೆ. ಈ ಕುರಿತು ರಾಜ್ಯ ಮಟ್ಟದ ಸಮಿತಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಮೇ 12ರವರೆಗೆ ಲಾಕ್‌ಡೌನ್‌ ಇದ್ದು, ಅಲ್ಲಿಯವರೆಗೆ ಕೈಗಾರಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಬೆಡ್‌ ಬ್ಲಾಕಿಂಗ್‌ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ’ ಎಂದು ಪ್ರತಿಕ್ರಿಯೆ ನೀಡಿದರು.

***

ಜಿಲ್ಲೆಯಲ್ಲಿ ಸೋಂಕಿನ ತೀವ್ರತೆ ಕಡಿಮೆ ಎಂಬುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ. ವಾಸ್ತವ ಪರಿಸ್ಥಿತಿ ಭಿನ್ನವಾಗಿದೆ. ಕಡಿಮೆ ಪರೀಕ್ಷೆಯಿಂದ ಉದಾಸೀನ ಸಲ್ಲದು. ಜಿಲ್ಲೆಯ ಪರಿಸ್ಥಿತಿ ಬಗ್ಗೆ ಸಚಿವರಿಗೆ ವಿವರಿಸಿದ್ದೇನೆ.

–ಜಿ.ಎಚ್‌.ತಿಪ್ಪಾರೆಡ್ಡಿ, ಶಾಸಕ, ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT