ಚಿತ್ರದುರ್ಗ: ಇಲ್ಲಿನ ಗಾಂಧಿ ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆಯ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದರು.
ಗಾಂಧಿ ವೃತ್ತದಲ್ಲಿ ನಸುಕಿನಲ್ಲಿ ಜಮಾಯಿಸಿದ ಪ್ರತಿಭಟನಕಾರರು ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಟೈರಿಗೆ ಬೆಂಕಿ ಹಾಕಿ ರಸ್ತೆ ತಡೆಗೆ ಮುಂದಾದರು. ಇದನ್ನು ತಡೆಯಲು ಮುಂದಾದ ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಕೋಟೆ ಠಾಣೆಯ ಸಿಪಿಐ ಪ್ರಕಾಶ್ ಅವರು ಬೆಂಕಿ ಹಚ್ಚಿದ ಟೈರುಗಳನ್ನು ರಸ್ತೆ ಬದಿಗೆ ಎಸೆದರು. ಬಳಿಕ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ನಸುಕಿನಲ್ಲಿ ಎಂದಿನತೆ ಅಂಗಡಿಗಳು ಬಾಗಿಲು ತೆರೆದಿದ್ದವು. ಮರುಕಟ್ಟೆಯಲ್ಲಿ ವಹಿವಾಟು ಆರಂಭವಾಗಿತ್ತು. ಬಸ್ ಹಾಗೂ ಆಟೊ ಸಂಚಾರ ಕೂಡ ಶುರುವಾಗಿತ್ತು. ಪ್ರತಿಭಟನೆ ಆರಂಭವಾಗಿದ್ದರಿಂದ ನಗರದ ಪ್ರಮುಖ ಬೀದಿಗಳು ಸ್ತಬ್ಧವಾಗಿವೆ.