ಚಿತ್ರದುರ್ಗ: ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಕೆ.ಮಹೇಶ್ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಭಾರತಿ ದಂಪತಿಯ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರಿಗೆ ₹ 1.08 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಂಪತಿಗೆ ಸೇರಿದ ದಾವಣಗೆರೆಯ ಜಯನಗರದಲ್ಲಿರುವ ಮನೆಯ ಮೇಲೆ ಗುರುವಾರ ಬೆಳಿಗ್ಗೆ 6ಕ್ಕೆ ದಾಳಿ ನಡೆಸಿದರು. ಮನೆಯಲ್ಲಿ ₹ 15 ಲಕ್ಷ ನಗದು ಹಾಗೂ ಸುಮಾರು 900 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಹೊಳಲ್ಕೆರೆಯ ಮಹೇಶ್ ಅವರ ಕಚೇರಿ ಮತ್ತು ಭಾರತಿ ಅವರ ಬೆಂಗಳೂರಿನ ಬಿಬಿಎಂಪಿ ಕಚೇರಿಯ ಮೇಲೆಯೂ ದಾಳಿ ನಡೆಸಲಾಗಿದೆ.
‘ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ದೂರು ಬಂದಿತ್ತು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ. ಜಮೀನು, ತೋಟ ಸೇರಿ ಇತರ ಆಸ್ತಿ ಇರುವುದು ಗೊತ್ತಾಗಿದೆ. ದಾಳಿ ಮುಂದುವರಿದಿದೆ’ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎನ್.ವಾಸುದೇವರಾಮ ಮಾಹಿತಿ ನೀಡಿದ್ದಾರೆ.