ಚಿತ್ರದುರ್ಗ: ಕವಾಡಿಗರಹಟ್ಟಿಯ ಕಲುಷಿತ ನೀರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆಯ ನೀರು ಸರಬರಾಜು ಸಹಾಯಕನನ್ನು ಅಮಾನತುಗೊಳಿಸಲಾಗಿದ್ದು, ಇಬ್ಬರು ನೀರುಗಂಟಿಗಳನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕರ್ತವ್ಯಲೋಪ ಎಸಗಿದ ಆರೋಪದಡಿ ಇಬ್ಬರು ಎಂಜಿನಿಯರುಗಳನ್ನು ಅಮಾನತುಗೊಳಿಸಲು ಶಿಫಾರಸು ಮಾಡಿದ್ದಾರೆ.
ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ ಆರ್.ಗಿರಡ್ಡಿ, ಕಿರಿಯ ಎಂಜಿನಿಯರ್ ಎಸ್.ಆರ್.ಕಿರಣ್ ಕುಮಾರ್ ಎಂಬುವರನ್ನು ಸೇವೆಯಿಂದ ಅಮಾನತುಗೊಳಿಸಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ನಗರಾಭಿವೃದ್ಧಿ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ನೀರು ಹಂಚಿಕೆಯ ಹೊಣೆ ನಿಭಾಯಿಸುತ್ತಿದ್ದ ನಗರಸಭೆಯ ‘ಡಿ’ ಗ್ರೂಪ್ ನೌಕರ ಸಿ.ಎಚ್.ಪ್ರಕಾಶ ಬಾಬು ಎಂಬುವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಗೊಂಡಿದ್ದ ಕವಾಡಿಗರಹಟ್ಟಿಯ ಇಬ್ಬರು ನೀರುಗಂಟಿಗಳನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೌರಾಯುಕ್ತ ಶ್ರೀನಿವಾಸ್ ಅವರಿಗೆ ಷೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
ನಗರಸಭೆಯ 17ನೇ ವಾರ್ಡ್ನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟು, 122 ಜನರು ಅಸ್ವಸ್ಥಗೊಂಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗೆ ಬುಧವಾರ ಸೂಚನೆ ನೀಡಿದ್ದರು.
ಇದನ್ನೂ ಓದಿ: ಕವಾಡಿಗರಹಟ್ಟಿಗೆ ಪೂರೈಕೆಯಾದ ನೀರು ಕುಡಿಯಲು ಯೋಗ್ಯವಾಗಿಲ್ಲ: ಆರೋಗ್ಯ ಇಲಾಖೆ ವರದಿ