ಹಿರಿಯೂರು: ಸಚಿವ ಕೆ.ಎಸ್. ಈಶ್ವರಪ್ಪ ಸಂವಿಧಾನ, ರಾಷ್ಟ್ರ ಧ್ವಜ ಹಾಗೂ ರಾಷ್ಟ್ರದ ವಿರೋಧಿ. ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.
'ಮುಸ್ಲಿಮರನ್ನ ಓಲೈಸಲು ಡಿ.ಕೆ.ಶಿವಕುಮಾರ್ ಸಂವಿಧಾನ ಮೀರಿ ಮಾತನಾಡುತ್ತಿದ್ದಾರೆ ಎಂಬ ಈಶ್ವರಪ್ಪ ಅವರ ಆರೋಪಕ್ಕೆ ಹಿರಿಯೂರಿನಲ್ಲಿ ಮಂಗಳವಾರ ತಿರುಗೇಟು ನೀಡಿದರು.
ಮುಖ್ಯಮಂತ್ರಿ ಮಾತುಗಳಿಗೆ ಪ್ರತಿಕ್ರಿಯೆ ನೀಡಬಹುದು. ರಸ್ತೆಯಲ್ಲಿ ಹೋಗುವವರು ಆಡುವ ಮಾತಿಗೆ ಪ್ರತಿಕ್ರಿಯೆ ನೀಡಲಾಗದು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯರು, ಹಿರಿತನದಿಂದ ಮಾತನಾಡಲಿ ಎಂದು ಹೇಳಿದರು.
ದೇಶದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಹವಣಿಸುತ್ತಿದೆ. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲಾಗುತ್ತಿದೆ. ಇತರರನ್ನು ಕೆಣಕಿ ಟ್ರ್ಯಾಪ್ ಮಾಡುವ ಪ್ರಯತ್ನ ಗಮನಕ್ಕೆ ಬಂದಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತನಾಡದಂತೆ ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಜವಾಬ್ದಾರಿಯುತವಾಗಿ ವರ್ತನೆ ಮಾಡುತ್ತಿದೆ ಎಂದು ಹೇಳಿದರು.
ಮಸೀದಿಯ ಆಜಾನ್ ಧಾರ್ಮಿಕ ವಿಚಾರ. ಒಂದು ಇತಿ ಮಿತಿಯಲ್ಲಿ ಇದು ನಡೆಯುತ್ತಿದೆ. ಈ ಬಗ್ಗೆ ನಾವು ಚರ್ಚೆ ಮಾಡಲು ಇಷ್ಟಪಡುವುದಿಲ್ಲ. ಇದಕ್ಕೆ ಕಾನೂನು, ಸಂವಿಧಾನವಿದೆ. ಸಿ.ಟಿ.ರವಿ ಅವರು ಬೇಕಿದ್ದರೆ ಅಲಾರಾಮ್ ಇಟ್ಟುಕೊಳ್ಳಲಿ ಎಂದು ತಿರುಗೇಟು ನೀಡಿದರು.