ಚಿತ್ರದುರ್ಗ: ಮಠಾಧೀಶರು, ಸಚಿವರು ಹಾಗೂ ಆದಿಜಾಂಬವ ಮಹಾಸಂಸ್ಥಾನದ ಭಕ್ತ ಸಮೂಹ ಮಾರ್ಕಾಂಡಮುನಿ ಸ್ವಾಮೀಜಿ ಅವರ ಅಂತಿಮ ದರ್ಶನವನ್ನು ಪಡೆದರು.
ಹೃದಯಾಘಾತದಿಂದ ಲಿಂಗೈಕ್ಯರಾದ ಸ್ವಾಮೀಜಿ ಅವರ ದರ್ಶನಕ್ಕೆ ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿಯ ಮಠದಲ್ಲಿ ಶುಕ್ರವಾರ ವ್ಯವಸ್ಥೆ ಮಾಡಲಾಗಿದೆ. ಇವರು ಹೃದಯಾಘಾತದಿಂದ ಗುರುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.
ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹಾಗೂ ಸಚಿವ ಗೋವಿಂದ ಎಂ. ಕಾರಜೋಳ ಅವರು ಕೋಡಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆದರು. ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಇದ್ದರು.
ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಸ್ವಾಮೀಜಿ ಅವರು ದರ್ಶನ ಪಡೆದರು.
ಶನಿವಾರ ಬೆಳಿಗ್ಗೆ 9 ಗಂಟೆಗೆ ಕೋಡಿಹಳ್ಳಿ ಮಠದ ಆವರಣದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಷಡಕ್ಷರಮುನಿ ಸ್ವಾಮೀಜಿ ತಿಳಿಸಿದ್ದಾರೆ.