ಚಿತ್ರದುರ್ಗ: ಜಲಜೀವನ್ ಮಿಷನ್ ಹಾಗೂ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಯಾವುದೇ ರೀತಿಯ ಅನುದಾನದ ಕೊರತೆ ಇಲ್ಲ. ಆದರೂ ಯೋಜನೆಗಳು ನಿಗದಿತ ಸಮಯಕ್ಕೆ ಪೂರ್ಣಗೊಳ್ಳುತ್ತಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಾಮ್ ಪ್ರಸಾತ್ ವಿ. ಮನೋಹರ ಅಸಮಾಧಾನ ವ್ಯಕ್ತಪಡಿಸಿದರು.
ಇಲ್ಲಿಯ ಜಿಲ್ಲಾ ಪಂಚಾಯಿತಿ ಮುಖ್ಯ ಕಚೇರಿ ಸಭಾಂಗಣದಲ್ಲಿ ಶನಿವಾರ ಜಲ ಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
‘ಈ ವಿಳಂಬಕ್ಕೆ ಗುತ್ತಿಗೆದಾರರ ನಿರ್ಲಕ್ಷ್ಯ ಕಾರಣ ಎಂದು ತಿಳಿದು ಬಂದಿದೆ. ಆದ್ದರಿಂದ ಕಾಮಗಾರಿಯ ಕಾರ್ಯಾದೇಶ ಪಡೆದು ಈವರೆಗೂ ಕೆಲಸ ಆರಂಭಿಸದ ಗುತ್ತಿಗೆದಾರರಿಗೆ ಕೂಡಲೇ ನೋಟಿಸ್ ಜಾರಿ ಮಾಡಿ. 15 ದಿನಗಳಲ್ಲಿ ಕೆಲಸ ಆರಂಭಿಸದಿದ್ದರೆ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ಕಾಮಗಾರಿ ಗುತ್ತಿಗೆ ಪಡೆದ ಗುತ್ತಿಗೆದಾರರು ಬಿಲ್ ಪಡೆಯುವುದಕ್ಕೆ ಮುಂದಾಗುತ್ತಾರೆಯೇ ಹೊರತು, ಕಾಮಗಾರಿ ಪೂರ್ಣಗೊಳಿಸುವ ಪ್ರಾಮಾಣಿಕ ಯತ್ನ ಮಾಡುತ್ತಿಲ್ಲ. ಅಧಿಕಾರಿಗಳು ಮೇಲ್ವಿಚಾರಣೆ ನಡೆಸಿ, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ಜನರಿಗೆ ನೀರು ಒದಗಿಸಲು ಪ್ರಯತ್ನಿಸಬೇಕು’ ಎಂದು ತಾಕೀತು ಮಾಡಿದರು.
‘ಕಾಮಗಾರಿಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವ ಮುನ್ನ ನೀರಿನ ಮೂಲಗಳ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ನಂತರವೇ ಪೈಪ್ಲೈನ್ ಅಳವಡಿಕೆ ಮಾಡಬೇಕು. ಪೈಪ್ಲೈನ್ ಅಳವಡಿಕೆ ಮಾಡಿ ಹಲವು ವರ್ಷಗಳ ಕಾಲ ನೀರು ಹರಿಸದೇ ಇದ್ದರೆ ಪೈಪ್ಲೈನ್ಗಳು ಒಡೆದು ಹಾಳಾಗುತ್ತವೆ. ಇದರಿಂದ ಸಾರ್ವಜನಿಕರ ಹಣ ಹಾಗೂ ಸಮಯ ವ್ಯರ್ಥವಾಗುತ್ತದೆ. ಇಂತಹ ಪ್ರಕರಣಗಳು ಕಂಡು ಬಂದರೆ ಸಂಬಂಧಪಟ್ಟ ಎಂಜಿನಿಯರ್ಗಳನ್ನು ಸಂಪೂರ್ಣ ಹೊಣೆ ಮಾಡಲಾಗುವುದು’ ಎಂದು ಎಚ್ಚರಿಸಿದರು.
‘ಕಾಮಗಾರಿಯಲ್ಲಿ ಬಳಸುತ್ತಿರುವ ಪ್ಲಾಸ್ಟಿಕ್ ಪೈಪ್ ಹಾಗೂ ಇತರ ವಸ್ತುಗಳ ಗುಣಮಟ್ಟದ ಬಗ್ಗೆ ಮೌಲ್ಯಮಾಪನ ಮಾಡಿಸಬೇಕು. ಜಲ ಜೀವನ್ ಮಿಷನ್ ಅಡಿಯಲ್ಲಿ ಈಗ ಹಳ್ಳಿಯೊಂದನ್ನು ಘಟಕವನ್ನಾಗಿ ಪರಿಗಣಿಸಿ ಟೆಂಡರ್ ಕರೆಯಲಾಗುತ್ತಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಸ್ಥಳೀಯ ಗುತ್ತಿಗೆದಾರರು ಹೆಚ್ಚು ಭಾಗವಹಿಸುತ್ತಿಲ್ಲ’ ಎಂದರು.
‘ಸೂಕ್ತ ಅನುಭವದ ಕೊರತೆ ಹಾಗೂ ನಿಯಮಗಳ ಮಾಹಿತಿಯ ಕೊರತೆಯಿಂದಾಗಿ ಸ್ಥಳೀಯರು ಟೆಂಡರ್ ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಇದರ ಲಾಭ ಪಡೆದ ದೂರದ ಊರುಗಳ ಗುತ್ತಿಗೆದಾರರು ಪೈಪ್ಲೈನ್ಗಳ ಸರಬರಾಜು ಇಲ್ಲ, ಕೆಲಸಗಾರರಿಲ್ಲ ಎಂಬ ನೆಪವೊಡ್ಡಿ ಕಾಮಗಾರಿ ಅನುಷ್ಠಾನದಲ್ಲಿ ವಿಳಂಬ ಮಾಡುತ್ತಿದ್ದಾರೆ. ಆದ್ದರಿಂದ ವಿವರವಾದ ವರದಿಯೊಂದಿಗೆ ಟೆಂಡರ್ ನಿಯಮಗಳನ್ನು ಸರಳೀಕರಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ’ ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ದಿವಾಕರ್, ಉಪ ಕಾರ್ಯದರ್ಶಿ ತಿಮ್ಮಪ್ಪ, ಮುಖ್ಯ ಲೆಕ್ಕಾಧಿಕಾರಿ ಸಿ.ಎಸ್. ಗಾಯತ್ರಿ, ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮಹಾಂತೇಶಪ್ಪ ಜಿ. ಕನ್ನೂರು, ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್. ನಾಡರ್ ಇದ್ದರು.
...............
ಜಿಲ್ಲೆಯಲ್ಲಿನ 1,080 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 51 ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂದಿನ ಬಾರಿ ಈ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು.
-ಡಾ.ರಾಮ್ ಪ್ರಸಾತ್ ವಿ. ಮನೋಹರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.