ಮೊಳಕಾಲ್ಮುರು: ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ‘ಗ್ಯಾರಂಟಿ’ ಯೋಜನೆಗಳನ್ನು ಯಥಾವತ್ತಾಗಿ ಜಾರಿ ಮಾಡಿರುವುದು ಪಕ್ಷದ ಸಾಮಾಜಿಕ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು. ‘ಗ್ಯಾರಂಟಿ’ ಯೋಜನೆಗಳನ್ನು ಘೋಷಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ರಾಂಪುರದಲ್ಲಿ ಶನಿವಾರ ನಡೆದ ವಿಜಯೋತ್ಸವದ ವೇಳೆ ಅವರು ಮಾತನಾಡಿದರು.
ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸುವ ಜತೆಗೆ ಸಮಾಜದ ಮುಖ್ಯವಾಹಿನಿಗೆ ಕರೆತಂದು ಸಬಲೀಕರಣ ಮಾಡಲು ಈ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಇವುಗಳನ್ನು ದುರ್ಬಳಕೆ ಮಾಡಿಕೊಳ್ಳದೆ ಸದುಪಯೋಗ ಮಾಡಿಕೊಳ್ಳುವ ಮೂಲಕ ಜಾರಿ ಮೂಲ ಉದ್ದೇಶವನ್ನು ಸಾಕಾರಗೊಳಿಸಬೇಕು ಎಂದು ಮನವಿ ಮಾಡಿದರು.
ಬಸ್ ನಿಲ್ದಾಣದ ಆವರಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು. ಮುಖಂಡರಾದ ಆರ್.ಎಂ. ಅಶೋಕ್, ಡಿ. ಪೆನ್ನಯ್ಯ, ಕೊಂಡಾಪುರ ಪರಮೇಶ್ವರಪ್ಪ, ಪರಮೇಶ್ವರಪ್ಪ, ಸಿದ್ದಬಸಪ್ಪ, ಜಗದೀಶ್ ಇದ್ದರು.