ಮೊಳಕಾಲ್ಮುರು: ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ನೂತನ ಕಾಯ್ದೆಗಳನ್ನು ವಿರೋಧಿಸಿ ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್ನಲ್ಲಿ ತಾಲ್ಲೂಕಿನ ಹಲವು ಸಂಘಟನೆಗಳು ಭಾಗಿಯಾಗಿದ್ದವು.
ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ, ಮಾನವ ಸರಪಳಿ ನಿರ್ಮಾಣ, ಬಹಿರಂಗ ಸಭೆ, ಮನವಿ ಸಲ್ಲಿಕೆ ನಡೆದವು. ತಾಲ್ಲೂಕಿನ ಬೇರೆಡೆ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಾಗಿ, ಎಲ್ಲ ಸಂಘಟನೆಗಳು ತಾಲ್ಲೂಕು ಮಟ್ಟದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು.
ನಂತರ ತಾಲ್ಲೂಕು ಕಚೇರಿ ಆವರಣಕ್ಕೆ ತೆರಳಿ ತಹಶೀಲ್ದಾರ್ ಮಲ್ಲಿ ಕಾರ್ಜುನ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿದರು. ಕಾಂಗ್ರೆಸ್, ಜೆಡಿಎಸ್, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ದಲಿತ ಸಂಘರ್ಷ ಸಮಿತಿ, ಸಿಪಿಐ, ಎಐಟಿಯುಸಿ, ಸಿಐಟಿಯು, ಸಿಪಿಎಂ, ಕರವೇ (ಪ್ರವೀಣ್ ಶೆಟ್ಟಿ ಬಣ), ಟ್ಯಾಕ್ಸಿ ಚಾಲಕರ ಸಂಘಗಳು ಬೆಂಬಲ ಸೂಚಿಸಿದ್ದವು.