ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಪ ಸರಿಪಡಿಸಲು ತಿಂಗಳ ಗಡುವು

ಸರ್ಕಾರಿ ಹಾಸ್ಟೆಲ್‌ಗೆ ಸಂಸದ ನಾರಾಯಣಸ್ವಾಮಿ ಭೇಟಿ
Last Updated 4 ಜನವರಿ 2020, 12:57 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಿಗೆ ಸಂಸದ ಎ.ನಾರಾಯಣಸ್ವಾಮಿ ಶನಿವಾರ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಪಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ತಿಂಗಳ ಗಡುವು ನೀಡಿದರು.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಬಾಲಕರ ‘ಬಿ’ ವಿದ್ಯಾರ್ಥಿ ನಿಲಯ, ಸರ್ಕಾರಿ ವಿಜ್ಞಾನ ಕಾಲೇಜು ವಿದ್ಯಾರ್ಥಿ ನಿಲಯ, ಸರ್ಕಾರಿ ಕಲಾ ಕಾಲೇಜು ‘ಎ’ ವಿದ್ಯಾರ್ಥಿ ನಿಲಯಗಳನ್ನು ವೀಕ್ಷಣೆ ಮಾಡಿದರು. ವಿದ್ಯಾರ್ಥಿಗಳಿಂದ ಕುಂದು ಕೊರತೆಗಳ ಮಾಹಿತಿ ಪಡೆದರು.

ವಿದ್ಯಾರ್ಥಿ ನಿಲಯಗಳ ಊಟದ ಕೊಠಡಿ, ಅಡುಗೆ ಕೋಣೆ, ಸ್ನಾನ ಗೃಹ, ಶೌಚಾಲಯದ ಸ್ವಚ್ಛತೆ ಪರಿಶೀಲನೆ ಮಾಡಿದರು. ವಿದ್ಯಾರ್ಥಿನಿಲಯಗಳಲ್ಲಿ ಗುಣಮಟ್ಟದ ಆಹಾರ, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಹಾಗೂ ನಿಲಯ ಪಾಲಕರಿಗೆ ಸೂಚನೆ ನೀಡಿದರು.

‘ಸರ್ಕಾರಿ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಕಲಾ ಕಾಲೇಜುಗಳಿಗೆ ಭದ್ರತೆ ಒದಗಿಸಲು ತಡೆಗೋಡೆ ನಿರ್ಮಿಸಲಾಗುವುದು. ಜತೆಗೆ ಕಾಲೇಜುಗಳಿಗೆ ಅಗತ್ಯವಾಗಿ ಬೇಕಾಗಿರುವ ಪ್ರಯೋಗಾಲಯ, ಪೀಠೋಪಕರಣ ಸೇರಿ ಇತರೆ ಮೂಲ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

‘ವಿದ್ಯಾರ್ಥಿನಿಲಯಗಳಲ್ಲಿರುವ ಸಮಸ್ಯೆ ನಿವಾರಣೆಗಾಗಿ ₹ 1 ಕೋಟಿ ಬಿಡುಗಡೆಯಾಗಿದೆ. ಜತೆಗೆ ರಾಜ್ಯ ಸರ್ಕಾರದಿಂದ ₹ 75 ಲಕ್ಷ ಹಣ ಬಿಡುಗಡೆಯಾಗಿದೆ. ವಿದ್ಯಾರ್ಥಿಗಳಿಗೆ ಅವಶ್ಯಕವಾಗಿ ಬೇಕಾಗಿರುವ ಸವಲತ್ತುಗಳಿಗೆ ಮಾತ್ರ ಅನುದಾನ ಸದುಪಯೋಗವಾಗಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿ ನಿಲಯಗಳಿಗೆ ಖುದ್ದು ಭೇಟಿ ನೀಡಿದ್ದೇನೆ’ ಎಂದು ತಿಳಿಸಿದರು.

ವಿದ್ಯಾರ್ಥಿನಿಲಯಗಳಲ್ಲಿ ಇ–ಗ್ರಂಥಾಲಯ, ಶೌಚಾಲಯಗಳ ದುರಸ್ತಿ, ವಿದ್ಯಾರ್ಥಿನಿಲಯಗಳ ಮೇಲ್ಭಾಗದ ಕಟ್ಟಡ ಭದ್ರ ಪಡೆಸುವುದು ಸೇರಿದಂತೆ ಇತರೆ ಮೂಲ ಸೌಲಭ್ಯ ಕಲ್ಪಿಸುವುದರ ಮೂಲಕ ವಿದ್ಯಾರ್ಥಿ ನಿಲಯಗಳಿಗೆ ಕಾಯಕಲ್ಪ ಕಲ್ಪಿಸುವ ಭರವಸೆ ನೀಡಿದರು.

‘ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ವಿದ್ಯಾರ್ಥಿ ನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಭೇಟಿ ನೀಡಿದಂತಹ ಸಂದರ್ಭದಲ್ಲಿ ಸಹಿ ಮಾಡಬೇಕು. ಅಧಿಕಾರಿಗಳು ಕಡ್ಡಾಯವಾಗಿ ವಾರಕ್ಕೊಮ್ಮೆ ಭೇಟಿ ಮಾಡುವ ಪರಿಪಾಠ ರೂಢಿಸಿಕೊಳ್ಳಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

‘ವಿದ್ಯಾರ್ಥಿ ನಿಲಯಗಳಿಗೆ ನ್ಯಾಯಾಧೀಶರು ಭೇಟಿ ನೀಡುತ್ತಿರುವುದರಿಂದ ಅನೇಕ ರೀತಿಯ ಪರಿವರ್ತನೆಗಳು ನಡೆಯುತ್ತಿವೆ. ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಸ್ವಚ್ಛತೆ ಕಾಪಾಡಬೇಕು. ಅಗತ್ಯವಿರುವ ಕಾಮಗಾರಿ ಪೂರ್ಣಗೊಳಿಸುವುದು ಸೇರಿದಂತೆ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾಗಿ ಬೇಕಾಗಿರುವ ಮೂಲಸೌಲಭ್ಯ ಕಲ್ಪಿಸಲು ಬದ್ಧವಾಗಿದ್ದು, ತಿಂಗಳಿಗೊಮ್ಮೆ ಹಾಸ್ಟೆಲ್‌ಗಳಿಗೆ ಭೇಟಿ ನೀಡುತ್ತೇನೆ’ ಎಂದು ಹೇಳಿದರು.

ವಿದ್ಯಾರ್ಥಿ ನಿಲಯಗಳಲ್ಲಿ ಕಂಡು ಬಂದಿರುವ ಲೋಪದೋಷಗಳನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸರಿಪಡಿಸಿಕೊಳ್ಳಬೇಕು. ಸಮಸ್ಯೆಗಳಿಗೆ ಸರಿಯಾಗಿ ಅಧಿಕಾರಿಗಳ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT