ಚಿತ್ರದುರ್ಗ: ಲಿಂಗಾಯತ ಸಮುದಾಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿದೆ. ಆರ್ಥಿಕ ಶ್ರೀಮಂತಿಕೆಗಿಂತ ಸಾಂಸ್ಕೃತಿಕ ಶ್ರೀಮಂತಿಕೆ ಶಾಶ್ವತ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.
ಇಲ್ಲಿನ ಮುರುಘಾ ಮಠದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆ, ವೀರಶೈವ ಲಿಂಗಾಯತ ಸಮಾಜ ಹಾಗೂ ವೀರಶೈವ ಪರಿಷತ್ ವತಿಯಿಂದ ರೂಪಿಸಿದ ಜಾಲತಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಅಸಹನೆಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸಂಘಟನೆ ಕಟ್ಟಲು ಸಾಧ್ಯವಾಗದೇ ಇದ್ದರೆ ಒಡೆಯಲು ಮುಂದಾಗಬೇಡಿ. ಕೆಲವರು ಅಜ್ಞಾನದಿಂದ ಸಂಘಟನೆಯ ವಿಘಟನೆಗೆ ಪ್ರಯತ್ನಿಸುತ್ತಾರೆ. ದೂರದೃಷ್ಟಿ ಇಟ್ಟುಕೊಂಡು ಸಂಘಟನೆ ಕಟ್ಟಬೇಕು. ಸಂಘಟಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ವೀರಶೈವ ಮಹಾಸಭಾದ ಕಾರ್ಯದರ್ಶಿ ಜಿ.ಎನ್. ಮಹೇಶ್ ಮಾತನಾಡಿ, ‘ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳ ಜನಗಣತಿಗೆ ಜಾಲತಾಣ ರೂಪಿಸಲಾಗಿದೆ. ಒಂದು ಗಂಟೆಗೆ ನೂರು ಜನರು ಏಕಕಾಲಕ್ಕೆ ಕಾರ್ಯನಿರ್ವಹಿಸಲು ಅವಕಾಶವಿದೆ’ ಎಂದು ಹೇಳಿದರು.
ಚಿತ್ರದುರ್ಗದ ಮುರುಘಾ ಮಠದಲ್ಲಿ ವೀರಶೈವ ಲಿಂಗಾಯತ ಸಮಾಜದ ಜಾಲತಾಣಕ್ಕೆ ಶಿವಮೂರ್ತಿ ಮುರುಘಾ ಶರಣರು ಸೋಮವಾರ ಚಾಲನೆ ನೀಡಿದರು.
ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ, ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಎಲ್.ಬಿ. ರಾಜಶೇಖರ್ ಇದ್ದರು.