ಹಿರಿಯೂರು: ‘ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಆಡಳಿತ ನೋಡಿ ರಾಜ್ಯದ ಜನ ಬೇಸತ್ತು ಹೋಗಿದ್ದು, 2023ರಲ್ಲಿ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ’ ಎಂದು ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಹೇಳಿದರು.
ನಗರಕ್ಕೆ ಸೋಮವಾರ ಭೇಟಿ ನೀಡಿದ್ದ ಅವರನ್ನು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಮುಖಂಡರ ಜೊತೆ ಮಾತುಕತೆ ನಡೆಸಿದರು.
‘ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ಅದೆಲ್ಲ ಬಿಜೆಪಿ ಸೃಷ್ಟಿ. ವಿರೋಧ ಪಕ್ಷವಾಗಿ ನಮ್ಮ ಪಕ್ಷ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದು, ಆಡಳಿತ ಪಕ್ಷದ ಜನವಿರೋಧಿ ನೀತಿಗಳನ್ನು, ಭ್ರಷ್ಟಾಚಾರವನ್ನು ಜಗಜ್ಜಾಹೀರುಗೊಳಿಸಿದೆ. 2013ರಿಂದ 2018ರ ವರೆಗೆ ಸಿದ್ದರಾಮಯ್ಯ ನೇತೃತ್ವದ ಜನಪರ ಆಡಳಿತವನ್ನು ನಾಡಿನ ಜನ ನೆನಪಿಸಿಕೊಳ್ಳುತ್ತಿದ್ದಾರೆ. ಎಲ್ಲಾ ಜಾತಿ, ಧರ್ಮ, ವರ್ಗದವರ ಏಳಿಗೆ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂಬ ಸತ್ಯದ ಅರಿವು ಜನರಿಗೆಆಗಿರುವ ಕಾರಣ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಸಾರ್ವತ್ರಿಕ ಚುನಾವಣೆಗೆ ಕಾಯುತ್ತಿದ್ದಾರೆ. ನಮ್ಮ ಪಕ್ಷದ ಪ್ರತಿ ಕಾರ್ಯಕರ್ತನೂ ಸಂಘಟನೆಗೆ ಕೈಜೋಡಿಸಬೇಕು. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು’ ಎಂದು ಅವರು ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷೆ ರಜಿಯಾ ಸುಲ್ತಾನ್, ಮುಖಂಡರಾದ ಖಾಲಿದ್ ಹುಸೇನ್, ಮದಲಾ ಮರಿಯಾ, ಅಲ್ಲಾಬಕ್ಷ್, ಅಜಿಮ್ ಪಾಷಾ, ಅಯೂಬ್, ಹಬೀದ್ ಹುಸೇನ್, ಗುರುಪ್ರಸಾದ್,ನಾಗರಾಜ್, ಶಾಹಿದ್ಇದ್ದರು.