ಚಳ್ಳಕೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಿದ ಹೊಸ ಶಿಕ್ಷಣ ನೀತಿ ಸಮಾಜದ ಬದಲಾವಣೆಗೆ ಪೂರಕವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ ಅಭಿಪ್ರಾಯಪಟ್ಟರು.
ನಗರದ ಆದರ್ಶ ವಿದ್ಯಾಲಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಶಿಕ್ಷಣ ಇಲಾಖೆಯ ಅನುಷ್ಠಾನಾಧಿಕಾರಿಗಳಿಂದ ಆಯೋಜಿಸಿದ್ದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಓದಿಗೆ ಪೂರಕವಾದ ಭಾರತೀಯ ಪರಂಪರೆ, ಸಂಸ್ಕೃತಿ ಮತ್ತು ವೈಜ್ಞಾನಿಕ ಅಂಶಗಳು ಹೊಸ ನೀತಿಯಲ್ಲಿ ನಿರೂಪಿತವಾಗಿವೆ. ಆದ್ದರಿಂದ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಮಂಜಣ್ಣ, ಹೊಸ ಶಿಕ್ಷಣ ನೀತಿಯ ರೂಪುರೇಷೆಗಳನ್ನು ಜನರಿಗೆ ತಪ್ಪದೇ ಮನವರಿಕೆ ಮಾಡಿಕೊಡಬೇಕು ಎಂದು ಅನುಷ್ಠಾನ ಅಧಿಕಾರಿಗಳಿಗೆ ಸಲಹೆ ನೀಡಿದರು.