ಚಿತ್ರದುರ್ಗ: ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಲೆ ಎದ್ದಿದ್ದು, ವಿರೋಧ ಪಕ್ಷಗಳಿಗೆ ನಡುಕ ಹುಟ್ಟಿಸಿದೆ. ಉಪ ಚುನಾವಣೆಯ ಸೋಲಿನ ಭೀತಿಯಲ್ಲಿ ವಿರೋಧ ಪಕ್ಷಗಳು ಆಧಾರ ರಹಿತ ಆರೋಪ ಮಾಡುತ್ತಿವೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮಾದಾರ ಚನ್ನಯ್ಯ ಗುರುಪೀಠಕ್ಕೆ ಗುರುವಾರ ಭೇಟಿ ನೀಡಿದ್ದ ಅವರು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಆಶೀರ್ವಾದ ಪಡೆದು ಮಾತನಾಡಿದರು. ‘ವಿಜಯೇಂದ್ರ ಅಕ್ರಮ ಹಣ ಸುರಿದು ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣೆ ಮಾಡುತ್ತಿದ್ದಾರೆ’ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.
‘ಕ್ಷೇತ್ರದ ಮತದಾರರು ಬದಲಾವಣೆ ಬಯಸುತ್ತಿದ್ದಾರೆ. ಕಮಲ ಅರಳಿಸುವ ವಿಶ್ವಾಸ ಪಕ್ಷದ ಕಾರ್ಯಕರ್ತರಲ್ಲಿ ಮೂಡಿದೆ. ಅಭಿವೃದ್ಧಿ ಕೆಲಸ ಆಗಬೇಕು ಎಂಬ ಅಪೇಕ್ಷೆಯನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ. ಅಭಿವೃದ್ಧಿ ಆಧಾರದ ಮೇರೆಗೆ ಚುನಾವಣೆ ಎದುರಿಸುತ್ತೇವೆ. ವಿರೋಧ ಪಕ್ಷಗಳು ಸೋಲು ಒಪ್ಪಿಕೊಂಡಿವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
‘ಬಿ.ಎಸ್.ಯಡಿಯೂರಪ್ಪ ಅವರೇ ಮುಂದಿನ ಮೂರು ವರ್ಷವೂ ಮುಖ್ಯಮಂತ್ರಿಯಾಗಿರುತ್ತಾರೆ ಎಂಬುದನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಗೆ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಲು ಇಚ್ಛೆ ಪಡುವುದಿಲ್ಲ’ ಎಂದು ಹೇಳಿದರು.