ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಶರಣರು ಅನಾರೋಗ್ಯದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ಚಿಕಿತ್ಸೆ ಪಡೆದಿದ್ದಾರೆ.
ಶಿವಮೂರ್ತಿ ಶರಣರು ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮೂತ್ರ ಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ತೊಂದರೆಯುಂಟಾಗಿತ್ತು. ಈ ಕುರಿತು ಕಾರಾಗೃಹದ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಮಾಹಿತಿ ನೀಡಿದ್ದರು. ವೈದ್ಯರು ಕಾರಾಗೃಹಕ್ಕೆ ತೆರಳಿ ಆರೋಗ್ಯ ಪರಿಶೀಲಿಸಿದ್ದರು.
'ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಶರಣರನ್ನು ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು. ಸ್ಕ್ಯಾನಿಂಗ್ ಮಾಡಲಾಗಿದ್ದು, ಮೂತ್ರ ಕೋಶದಲ್ಲಿ ಯಾವುದೇ ತೊಂದರೆ ಕಾಣಿಸಿಕೊಂಡಿಲ್ಲ. ತಪಾಸಣೆಯ ಬಳಿಕ ಕಾರಾಗೃಹಕ್ಕೆ ಮರಳಿದರು' ಎಂದು ಜಿಲ್ಲಾ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.