ಹೊಳಲ್ಕೆರೆ: ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಭರವಸೆ ನೀಡಿದರು.
ಪಟ್ಟಣದ ಪುರಸಭೆಯಲ್ಲಿ ಬುಧವಾರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
‘ತಾಲ್ಲೂಕಿನಲ್ಲಿ ಹೆಚ್ಚು ಅಡಿಕೆ ಬೆಳೆಗಾರರಿದ್ದು, ಆರ್ಥಿಕವಾಗಿ ಸಬಲರಾಗಿದ್ದಾರೆ. ಆದರೆ ಪಟ್ಟಣ ಹೆಚ್ಚು ಅಭಿವೃದ್ಧಿಯಾಗಿಲ್ಲ. ಪಟ್ಟಣವನ್ನು ಅಭಿವೃದ್ಧಿ ಮಾಡಲು ಒಂದಿಷ್ಟು ಯೋಜನೆಗಳನ್ನು ಜಾರಿಗೊಳಿಸುವ ಚಿಂತನೆ ಇದೆ. ಸಂಪನ್ಮೂಲ ಕ್ರೂಢೀಕರಣ ಮಾಡುವ ಮೂಲಕ ಉದ್ಯೋಗ ಹೆಚ್ಚಳಕ್ಕೆ ಆದ್ಯತೆ ನೀಡಲಾಗುವುದು. ವ್ಯಾಪಾರಿಗಳಿಗೆ ಸೂಕ್ತ ಅವಕಾಶ ಕಲ್ಪಿಸಲಾಗುವುದು. ನಾನು ಹಾಗೂ ಶಾಸಕ ಎಂ. ಚಂದ್ರಪ್ಪ ಜೋಡೆತ್ತಿನಂತೆ ಕೆಲಸ ಮಾಡುತ್ತೇವೆ’ ಎಂದರು.
ನಾನು ಚಿಕ್ಕವನಿದ್ದಾಗಿನಿಂದ ಇಲ್ಲಿನ ಒಡನಾಟ ಇದೆ. ನಮ್ಮೂರಿನಿಂದ ಚಿತ್ರದುರ್ಗಕ್ಕೆ ಹೋಗುವಾಗ ಇದೇ ಮಾರ್ಗದಲ್ಲಿ ಸಂಚರಿಸಬೇಕು. ನಾನು ಇಲ್ಲಿನ ಶಕ್ತಿ ಗಣಪತಿಗೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದ್ದೆ. ಮುಂದೆ ಗ್ರಾಮ ಪಂಚಾಯಿತಿಗಳ ಸಬಲೀಕರಣಕ್ಕೆ ಯೋಜನೆ ರೂಪಿಸಲಾಗುವುದು. ದುಮ್ಮಿ ಗ್ರಾಮ ಪಂಚಾಯಿತಿ ಕಟ್ಟಡ ಮಳೆಯಿಂದ ಸೋರುತ್ತಿತ್ತು. ಅಲ್ಲಿನ ಸದಸ್ಯರು ಅನುದಾನ ಕೊಡಿಸುವಂತೆ ನನ್ನ ಬಳಿ ಬಂದಿದ್ದರು. ಆಗ ನಾನು ಇನ್ನೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಆಗಿದ್ದೆ. ಸಚಿವ ಈಶ್ವರಪ್ಪ ಅವರನ್ನು ಸಂಪರ್ಕಿಸಿ ₹1 ಕೋಟಿ ಅನುದಾನ ಕೊಡಿಸಿದ್ದೆ ಎಂದರು.
ಪುರಸಭೆ ಅಧ್ಯಕ್ಷ ಆರ್.ಎ. ಅಶೋಕ್ ಮಾತನಾಡಿ, ‘ಕೆ.ಎಸ್.ನವೀನ್ ಎರಡು ಬಾರಿ ಸೋತರೂ ಧೃತಿಗೆಡದೆ ಆತ್ಮವಿಶ್ವಾಸದಿಂದ ಚುನಾವಣೆಗೆ ಸ್ಪರ್ಧಿಸಿದರು. ಈ ಬಾರಿಯ ಚುನಾವಣೆಯಲ್ಲಿ ಜನಬಲದ ಮುಂದೆ ಹಣಬಲ ನಡೆಯಲಿಲ್ಲ. ಕಾರ್ಯಕರ್ತರ ಹೋರಾಟದ ಫಲವಾಗಿ ಗೆಲುವು ಸಾಧ್ಯವಾಯಿತು. ನವೀನ್ ಅವರು ಮುಂದಿನ ದಿನಗಳಲ್ಲಿ ಜಿಲ್ಲೆಯ ದೊಡ್ಡ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲಿದ್ದಾರೆ’ ಎಂದರು.