ಚಿತ್ರದುರ್ಗ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರೋಧಿಸಿ ವಕೀಲರು ಮಂಗಳವಾರ ಪ್ರತಿಭಟನೆ ನಡೆಸಿದರು.
ನ್ಯಾಯಾಲಯದ ಆವರಣದಿಂದ ಮೆರವಣಿಗೆ ಹೊರಟ ವಕೀಲರು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳ ರಚಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು.
ವಕೀಲ ಬಿ.ಕೆ. ರಹಮತ್ ಉಲ್ಲಾ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಾರಿಗೆ ತಂದಿರುವ ಕಾಯ್ದೆಗಳು ಸಮಾಜಕ್ಕೆ ಮಾರಕವಾಗಿವೆ. ಮುಸ್ಲಿಮರು, ಹಿಂದುಳಿದವರು, ದಲಿತರು, ಪರಿಶಿಷ್ಟ ವರ್ಗ, ಬುಡಕಟ್ಟು ಜನಾಂಗ ಸೇರಿ ದೇಶದ ನಿವಾಸಿಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ರದ್ದುಪಡಿಸಬೇಕು’ ಎಂದ ಒತ್ತಾಯಿಸಿದರು.
ವಕೀಲ ಸಿ. ಶಿವುಯಾದವ್ ಮಾತನಾಡಿ, ‘ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆಯುಂಟು ಮಾಡಿದೆ. ಕಾಯ್ದೆ ಅವೈಜ್ಞಾನಿಕವಾಗಿದ್ದು, ಮತ್ತೊಮ್ಮೆ ಪರಿಶೀಲಿಸಿ ಹಿಂದಕ್ಕೆ ಪಡೆಯಬೇಕು. ಕೇಂದ್ರ ಸರ್ಕಾರ ಕೇಳುವ ಎಲ್ಲಾ ದಾಖಲೆಗಳು ಜನರ ಬಳಿ ಇಲ್ಲ. ವಿನಾ ಕಾರಣ ಜನರಿಗೆ ತೊಂದರೆ ನೀಡಬಾರದು. ಕಾಯ್ದೆಯನ್ನು ರದ್ದುಗೊಳಿಸುವತನಕ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.