ಚಿತ್ರದುರ್ಗ: ಗ್ರಾಮ ಪಂಚಾಯಿತಿಗಳಲ್ಲಿ ಯಾವುದೇ ನೇಮಕಾತಿ ಆಗಿರಲಿ ಅಕ್ರಮವಾಗಿ ಮಾಡಿಕೊಂಡಿದ್ದಲ್ಲಿ ತಕ್ಷಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಸಮಿತಿ ಕಾರ್ಯಕರ್ತರು ಶನಿವಾರ ಜಿಲ್ಲಾ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದರು.
ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಮೂಲಕ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ರವಾನಿಸಿದರು.
ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್/ಗುಮಾಸ್ತ ಹುದ್ದೆಯಿಂದ ಗ್ರೇಡ್-2 ಕಾರ್ಯದರ್ಶಿ ಅಥವಾ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಆಯ್ಕೆ ಮಾಡಲು ಸರ್ಕಾರ ನೇರ ನೇಮಕಾತಿ ಆದೇಶ ಹೊರಡಿಸಿರುವುದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
15ನೇ ಹಣಕಾಸಿನಲ್ಲಿ ನೀರಗಂಟಿ/ಸ್ವೀಪರ್ಗಳಿಗೆ ವೇತನ ಪಾವತಿಸುವಂತೆ ಸರ್ಕಾರ ಆದೇಶ ನೀಡಿದ್ದರೂ ಗ್ರಾಮ ಪಂಚಾಯಿತಿಗಳು ವೇತನ ಪಾವತಿಸಿಲ್ಲ. ಇದರಿಂದಾಗಿ 18ರಿಂದ 20 ತಿಂಗಳ ವೇತನ ಬಾಕಿ ಇದೆ. ಕೂಡಲೇ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನೀರಗಂಟಿ, ಸಿಪಾಯಿ, ಸ್ವೀಪರ್ ಹುದ್ದೆಯಿಂದ ಬಿಲ್ ಕಲೆಕ್ಟರ್ ಹುದ್ದೆಗೆ ಜ್ಯೇಷ್ಠತೆಯ ಆಧಾರದ ಮೇಲೆ ಪದೋನ್ನತಿ ನೀಡಲು ಪಿಡಿಒಗಳಿಗೆ ನಿರ್ದೇಶನ ನೀಡಬೇಕು. ಸಹಾಯಕರ ಹುದ್ದೆ–ಗಣಕಯಂತ್ರ ಆಪರೇಟರ್ಗಳ ನೇಮಕ ನಿಯಮಕ್ಕೆ ತಿದ್ದುಪಡಿ ತರಬೇಕು ಎಂದು ಕೋರಿದರು.
ಮುಖಂಡರಾದ ಎಂ.ಬಿ. ನಾಡೇಗೌಡ್ರು, ಡಿ.ಎಂ. ಮಲಿಯಪ್ಪ, ಶಶಿಕುಮಾರ್, ಎ. ಮಾರಪ್ಪ, ಉಮೇಶ, ಸನಾವುಲ್ಲಾ, ಎ.ಕೆ. ಚಂದ್ರಪ್ಪ, ಪಾಪಣ್ಣ, ಎಂ. ಮಹೇಶ, ಗೋವಿಂದಪ್ಪ ಇದ್ದರು.