ಹೊಳಲ್ಕೆರೆ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕಾರ್ಮಿಕ ಮಂಡಳಿಯ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ತಾಲ್ಲೂಕು ಘಟಕದಿಂದ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಯಿತು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ.ಸಿದ್ದೇಶ್ ಮಾತನಾಡಿ, ‘ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿ.ಎಸ್.ಮಂಜುನಾಥ್ ಅವರಿಗೆ ದೇಶದ ಪ್ರಧಾನ ಮಂತ್ರಿಯ ಬಗ್ಗೆ ಹೇಗೆ ಮಾತನಾಡಬೇಕು ಎಂಬ ಅರಿವಿಲ್ಲ. ದೇಶದ ಅತ್ಯುನ್ನತ ವ್ಯಕ್ತಿಯ ಬಗ್ಗೆ ಕೀಳಾಗಿ ಮಾತನಾಡುವ ಮೂಲಕ ಅನಾಗರಿಕನಂತೆ ವರ್ತಿಸಿದ್ದಾರೆ. ಅವರ ಮಾತುಗಳೇ ಅವರ ಸಂಸ್ಕೃತಿಯನ್ನು ತೋರಿಸುತ್ತವೆ. ಪೊಲೀಸರು ತಕ್ಷಣವೇ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.
ಬಿಜೆಪಿ ಮಂಡಲ ಕಾರ್ಯದರ್ಶಿ ರೂಪಾ ಸುರೇಶ್, ಮಹಿಳಾ ಘಟಕದ ಅಧ್ಯಕ್ಷೆ ಸರಸ್ವತಿ ಸಿದ್ದೇಶ್, ದಾಸಯ್ಯನ ಹಟ್ಟಿ ರಮೇಶ್, ಶಿವಪುರ ಅಜ್ಜಯ್ಯ, ಅರುಣ್, ರಮೇಶ್ ಗೌಡ್ರು, ತಿಪ್ಪೇಸ್ವಾಮಿ, ಮಾರುತೇಶ್, ಆನಂದಪ್ಪ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.