ಚಿತ್ರದುರ್ಗ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಅವರನ್ನು ರಾಜ್ಯ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎನ್.ಮೂರ್ತಿ ಆಗ್ರಹಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೀಸಲಾತಿ ಪಟ್ಟಿಯಿಂದ ಕೊರಮ, ಕೊರಚ, ಭೋವಿ, ಲಂಬಾಣಿ ಸಮುದಾಯವನ್ನು ಕೈಬಿಡುವ ಬಗ್ಗೆ ಎಲ್ಲಿಯೂ ಉಲ್ಲೇಖವಾಗಿಲ್ಲ. ಅವರಿಗೂ ಮೀಸಲಾತಿಯ ಪ್ರಮಾಣ ನಿಗದಿಯಾಗಲಿದೆ. ತಪ್ಪು ಮಾಹಿತಿ ನೀಡಿ ಸಮುದಾಯದ ದಿಕ್ಕು ತಪ್ಪಿಸುತ್ತಿರುವ ಚವಾಣ್ ಅವರಿಗೆ ಸಚಿವ ಸ್ಥಾನ ನೀಡಬಾರದಿತ್ತು’ ಎಂದು ಅಭಿಪ್ರಾಯಪಟ್ಟರು.
‘ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಕೋಲ್ಡ್ ಸ್ಟೋರೆಜ್ನಲ್ಲಿ ಇಟ್ಟಿದೆ. ಇದಕ್ಕೆ ಮುಖ್ಯಮಂತ್ರಿಗಳು ಉತ್ತರ ನೀಡಬೇಕು. ಒಳಮೀಸಲಾತಿ ನೀಡದೇ ಇದ್ದರೆ ಸಂವಿಧಾನಕ್ಕೆ ಅವಮಾನ ಮಾಡಿದಂತೆ ಆಗುತ್ತದೆ. ಕೂಡಲೇ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಉಗ್ರ ಚಳವಳಿ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
‘ಒಳಮೀಸಲಾತಿ ವಿಚಾರವನ್ನು ರಾಜಕೀಯ ಪಕ್ಷಗಳು ಮತಗಳಿಕೆಗೆ ಬಳಕೆ ಮಾಡಿಕೊಳ್ಳುತ್ತಿವೆ. ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಕೂಡ ಸ್ಪಷ್ಟ ನಿಲುವು ವ್ಯಕ್ತಪಡಿಸಲಿಲ್ಲ. ಚುನಾವಣೆ ಸಂದರ್ಭದಲ್ಲಿ ಆಶ್ವಾಸನೆಗಳನ್ನು ನೀಡಿ ದೂರ ಉಳಿಯುತ್ತಿದ್ದಾರೆ. ಸದಾಶಿವ ಆಯೋಗದ ಬಗ್ಗೆ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಆಡುತ್ತಿರುವ ಮಾತು ಕೊಂಚ ಭರವಸೆ ಮೂಡಿಸಿದೆ’ ಎಂದು ಹೇಳಿದರು.
ಭೀಮ್ ಆರ್ಮಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಅವಿನಾಶ್, ಮಾದಿಗ ಸಮಾಜದ ಮುಖಂಡ ತಿಪ್ಪೇಸ್ವಾಮಿ, ಕುಂಚಿಗನಹಾಳ್ ಮಹಾಲಿಂಗಪ್ಪ, ಮುಖಂಡರಾದ ನೇಹ ಮಲ್ಲೇಶ್, ಕೃಷ್ಣಮೂರ್ತಿ, ಮಂಜುನಾಥ್, ಏಕಾಂತಪ್ಪ, ಎನ್.ಸತೀಶ್ಕುಮಾರ್, ತಿಪ್ಪೇಸ್ವಾಮಿ, ರಂಗಸ್ವಾಮಿ ಇದ್ದರು.