ಚಿತ್ರದುರ್ಗ: ಇಲ್ಲಿನ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಧ್ವಜಾರೋಹಣ ನೆರವೇರಿಸಿದರು.
ಕ್ರೀಡಾಂಗಣಕ್ಕೆ ಆಗಮಿಸಿದ ಸಚಿವರು ಪಥಸಂಚಲನ ನಡೆಸಲು ಸಜ್ಜಾದ ತಂಡಗಳ ಪರಿವೀಕ್ಷಣೆ ನಡೆಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್ ತುಕಡಿ, ಗೃಹರಕ್ಷಕ ದಳ, ಅಬಕಾರಿ, ಅರಣ್ಯ, ಎನ್ ಸಿ ಸಿ ಸೇರಿ ಹಲವು ತಂಡಗಳು ಆಕರ್ಷಕ ಪಥಸಂಚಲನ ನಡೆಸಿದವು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಸಿ.ಪಾಟೀಲ, 'ಭಾರತೀಯತೆ ಎನ್ನುವ ರಾಷ್ಟ್ರ ಧರ್ಮಕ್ಕೆ ಸಂವಿಧಾನವೇ ರಾಷ್ಟ್ರದ ಧರ್ಮಗ್ರಂಥ. ಸಾಂವಿಧಾನಿಕ ಪ್ರಜ್ಞೆಯೇ ಅಭಿವೃದ್ಧಿಗೆ ರಹದಾರಿ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಇದನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಆಯುಷ್ಮಾನ್ ಭಾರತ, ಗ್ರಾಮ ಒನ್, ಭದ್ರಾ ಮೇಲ್ದಂಡೆ, ಆತ್ಮ ನಿರ್ಭರ ಭಾರತ, ಮುದ್ರಾ ಸೇರಿ ಸರ್ಕಾರದ ಹಲವು ಯೋಜನೆಗಳನ್ನು ಸಚಿವರು ಪ್ರಸ್ತಾಪಿಸಿದರು.
ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ತನಿರ್ವಹಣಾಧಿಕಾರಿ ಎಂ.ಎಸ್.ದಿವಾಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಚಂದ್ರಯ್ಯ ಇದ್ದರು.