ಹೊಳಲ್ಕೆರೆ: ಶತಮಾನಗಳಿಂದ ತುಳಿತಕ್ಕೆ ಒಳಗಾಗಿರುವ ಮಾದಿಗ ಜನಾಂಗಕ್ಕೆ ಒಳಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
‘ಹೊಲೆ ಮಾದಿಗರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಈ ತಳ ಸಮುದಾಯ ಮೇಲೆ ಬರಲು ಒಳ ಮೀಸಲಾತಿಯ ಅಗತ್ಯವಿದೆ. 2005ರಲ್ಲಿ ಧರ್ಮಸಿಂಗ್ ಮುಖ್ಯಮಂತ್ರಿಯಾಗಿದ್ದಾಗ ಮೀಸಲಾತಿ ತಾರತಮ್ಯದ ಬಗ್ಗೆ ವರದಿ ನೀಡಲು ಸದಾಶಿವ ಆಯೋಗವನ್ನು ನೇಮಿಸಿತು. ಈ ಆಯೋಗವು ಆರೂವರೆ ವರ್ಷ ಅಧ್ಯಯನ ನಡೆಸಿ 2012ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತು. ಆದರೆ, ಇದುವರೆಗೆ ಬಂದ ಸರ್ಕಾರಗಳು ಈ ವರದಿಯ ಬಗ್ಗೆ ಚರ್ಚೆ ನಡೆಸಿಲ್ಲ’ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.
ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಸಂಚಾಲಕ ಡಿ.ಆರ್.ಪಾಂಡುರಂಗ ಸ್ವಾಮಿ, ಸಂಘಟನಾ ಸಂಚಾಲಕ ಕಸ್ತೂರಪ್ಪ, ತಾಲ್ಲೂಕು ಸಂಚಾಲಕ ಮಂಜು ದಾಸಿಕಟ್ಟೆ, ಶಿವಕುಮಾರ್, ಹಾಲೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.