ಚಿತ್ರದುರ್ಗ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಹುದ್ದೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಗುರುವಾರ ಪ್ರತಿಭಟನೆ ನಡೆಸಿತು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ಕಡಿಮೆ ಸಿಬ್ಬಂದಿಯಿರುವ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರು ಅಧಿಕ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೂ 29 ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಭಿವೃದ್ಧಿ ಕಾರ್ಯಕ್ಕೆ ಧಕ್ಕೆ ಬಾರದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.
ಲೋಕಾಯುಕ್ತ ತನಿಖೆಯಲ್ಲಿರುವ 2006-07ರಿಂದ 2011-12 ರವರೆಗಿನ ನರೇಗಾ ಯೋಜನೆಯ ಕಾಮಗಾರಿಗಳ ಪ್ರಕರಣಗಳನ್ನು ಹಿಂಪಡೆಯಬೇಕು. 15 ದಿನದಲ್ಲಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆನೀಡಿದರು.
ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪಾತಣ್ಣ, ಉಪಾಧ್ಯಕ್ಷೆ ರೂಪಾ ಕುಮಾರಿ, ರಾಜ್ಯ ಪರಿಷತ್ ಸದಸ್ಯ ಸಿದ್ದರಾಮಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುಂಡಪ್ಪ, ಪದಾಧಿಕಾರಿಗಳಾದ ವೀರೇಶ್, ಹನ್ಸೀರಾಬಾನು, ಸಂತೋಷ್ ಕುಮಾರ್, ದೇವರಾಜ್, ಬಾಲಸುಬ್ರಹ್ಮಣ್ಯ, ಆಂಜಿನಪ್ಪ, ನೂರುಲ್ಲಾ ಇದ್ದರು.