ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹಾಗೂ ಹಾಸ್ಟೆಲ್ನ ಮಹಿಳಾ ವಾರ್ಡನ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 10ರವರೆಗೆ ವಿಸ್ತರಿಸಲಾಗಿದೆ.
ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿದ್ದರಿಂದ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಆರೋಪಿಗಳನ್ನು ಮಂಗಳವಾರ ಹಾಜರುಪಡಿಸಲಾಯಿತು. ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಆದೇಶಿಸಿದರು.
ಇಬ್ಬರು ಆರೋಪಿಗಳನ್ನು ಸೆ.1ರಂದು ಬಂಧಿಸಲಾಗಿತ್ತು. ಶಿವಮೂರ್ತಿ ಮುರುಘಾ ಶರಣರನ್ನು ಜಿಲ್ಲಾ ಕಾರಾಗೃಹದಲ್ಲಿ ಹಾಗೂ ಮಹಿಳಾ ವಾರ್ಡನ್ ಅವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಬಾಲಕ ಸೇರಿ ಇನ್ನೂ ಮೂವರನ್ನು ತನಿಖಾ ತಂಡ ಪತ್ತೆ ಮಾಡಬೇಕಿದೆ.