ಹೊಳಲ್ಕೆರೆ: ತರಳಬಾಳು ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ನಿವೇಶನ ನೀಡುವುದಾಗಿ ಶಾಸಕ ಎಂ.ಚಂದ್ರಪ್ಪ ಭರವಸೆ ನೀಡಿದರು.
ತರಳಬಾಳು ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪಟ್ಟಣದ ಕನ್ನಡ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಸಾಧು ವೀರಶೈವ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತರಳಬಾಳು ನೌಕರರ ಸಂಘವು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದೆ. ಪ್ರತಿ ವರ್ಷ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಶಿಕ್ಷಣಕ್ಕೆ ಪ್ರೇರಣೆ ನೀಡುತ್ತಿದೆ. ಪೋಷಕರು ಮಕ್ಕಳಿಗೆ ಆಸ್ತಿ ಮಾಡುವ ಬದಲು, ಮಕ್ಕಳನ್ನೇ ಆಸ್ತಿ ಮಾಡಬೇಕು. ತರಳಬಾಳು ಮಠದ ಶ್ರಮದ ಫಲದಿಂದ ಸಾಧು ವೀರಶೈವ ಸಮಾಜ ಉನ್ನತ ಸ್ಥಾನದಲ್ಲಿದೆ. ಶ್ರೀಗಳು ಶಾಲಾ ಕಾಲೇಜುಗಳನ್ನು ಆರಂಭಿಸಿ ಸಮಾಜ ಸುಶಿಕ್ಷಿತವಾಗುವಂತೆ ಮಾಡಿದರು ಎಂದರು.
ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಶಿವಕುಮಾರ್, ‘ಸಾಧು ವೀರಶೈವ ಸಮಾಜ ಎಲ್ಲಾ ಕ್ಷೇತ್ರಗಳಲ್ಲಿ ಹಿಂದೆ ಉಳಿದಿತ್ತು. ನಮ್ಮನ್ನು ಮುನ್ನಡೆಸುವ ಗುರು ಇರಲಿಲ್ಲ. ಶಿವಕುಮಾರ ಸ್ವಾಮೀಜಿ ತರಳಬಾಳು ಪೀಠಾಧ್ಯಕ್ಷರಾದ ಮೇಲೆ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲವಾಯಿತು. ತರಳಬಾಳು ನೌಕರರ ಸಂಘ ರಾಜ್ಯಾದ್ಯಂತ ಸಮಾಜವನ್ನು ಸಂಘಟಿಸುವ ಕಾರ್ಯ ಮಾಡುತ್ತಿದೆ’ ಎಂದು ಹೇಳಿದರು.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲೋಕೇಶ್, ತರಳಬಾಳು ನೌಕರರ ಸಂಘದ ಅಧ್ಯಕ್ಷ ಜಿ.ಎಂ. ಶಿವಪ್ಪ, ಎ.ಸಿ.ಗಂಗಾಧರಪ್ಪ, ಸಾಧು ವೀರಶೈವ ಸಮಾಜದ ಅಧ್ಯಕ್ಷ ನಾಗಲಿಂಗಪ್ಪ, ಸಂಘದ ಪದಾಧಿಕಾರಿಗಳು ಇದ್ದರು.