ಚಿತ್ರದುರ್ಗ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಜುಲೈ 3ರಂದು ಮುಕ್ತಾಯವಾಗಿದ್ದು, ಪ್ರಶ್ನೆ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸೋಮವಾರದಿಂದ ಆರಂಭವಾಗಿದೆ.
ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ವಾಸವಿ ವಿದ್ಯಾಸಂಸ್ಥೆ, ವಿದ್ಯಾವಿಕಾಸ ವಿದ್ಯಾಸಂಸ್ಥೆ, ಸಂತ ಜೋಸೆಫರ ಕಾನ್ವೆಂಟ್, ಚಿನ್ಮೂಲಾದ್ರಿ, ಸಂಪಿಗೆ ಸಿದ್ಧೇಶ್ವರ ಪ್ರೌಢಶಾಲೆ ಸೇರಿ ನಗರದ ಆರು ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ.
ಆರೂ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಆಯಾ ವಿಷಯದ ಮೌಲ್ಯಮಾಪನ ನಡೆಯುತ್ತಿದೆ. ಅದಕ್ಕಾಗಿ 1,200ರಿಂದ 1,300 ಮಂದಿ ಶಿಕ್ಷಕರನ್ನು ನಿಯೋಜಿಸಲಾಗಿದೆ.
ಬೆಳಿಗ್ಗೆ 10ರಿಂದ ಆರಂಭವಾಗುವ ಪ್ರಕ್ರಿಯೆ ಸಂಜೆ 5ಕ್ಕೆ ಮುಕ್ತಾಯವಾಗಲಿದೆ. ಒಬ್ಬೊಬ್ಬ ಶಿಕ್ಷಕರು ಕನಿಷ್ಠ 20 ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.