ಕೊಟ್ಟೂರಿನಲ್ಲಿ ನಾಳೆಯಿಂದ ತರಳಬಾಳು ಹುಣ್ಣಿಮೆ

ಚಿತ್ರದುರ್ಗ: ತಾಲ್ಲೂಕಿನ ಸಿರಿಗೆರೆಯ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಜ.28ರಿಂದ ಫೆ.5ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ.
ಕೋವಿಡ್ ಕಾರಣಕ್ಕೆ ಎರಡು ವರ್ಷ ಸರಳವಾಗಿ ನಡೆದಿದ್ದ ಹುಣ್ಣಿಮೆ ಮಹೋತ್ಸವ ಈ ಬಾರಿ ಅದ್ಧೂರಿಯಾಗಿ ಜರುಗಲಿದೆ. ಶನಿವಾರ ಸಂಜೆ 6ಕ್ಕೆ ಮಹೋತ್ಸವ ಉದ್ಘಾಟನೆ ಆಗಲಿದೆ.
ವಿಜಯಪುರದ ನಿರ್ಭಯಾನಂದ ಸ್ವಾಮೀಜಿ, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅಂದು ಆಶೀರ್ವಚನ ನೀಡಲಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಶಾಸಕರಾದ ಎಸ್.ಎ.ರವೀಂದ್ರನಾಥ್, ಮಾಡಾಳು ವಿರೂಪಾಕ್ಷಪ್ಪ, ಪಿ.ಟಿ.ಪರಮೇಶ್ವರ ನಾಯ್ಕ್, ಎಂ.ಚಂದ್ರಪ್ಪ, ಸತೀಶ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಕಾದಂಬರಿಕಾರ ಬಿ.ಎಲ್.ವೇಣು, ಪತ್ರಕರ್ತ ರಂಗನಾಥ್ ಭಾರದ್ವಾಜ್, ಹಿರೇಮಗಳೂರು ಕಣ್ಣನ್ ಉಪನ್ಯಾಸ ನೀಡಲಿದ್ದಾರೆ.
ಜ.29ರಂದು ಸಂಜೆ 6ಕ್ಕೆ ಮಠಾಧೀಶರ ಚಿಂತನ ಗೋಷ್ಠಿ ಇದೆ. ಬೇಲಿಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿ, ಪ್ರಸನ್ನಾನಂದಪುರಿ ಸ್ವಾಮೀಜಿ, ಚೌಡಯ್ಯ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಮಹಾಂತ ಬಸವಲಿಂಗ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ, ಬಸವ ಮಾಚಿದೇವ ಸ್ವಾಮೀಜಿ, ಸೇವಾಲಾಲ್ ಸ್ವಾಮೀಜಿ, ಸವಿತಾನಂದ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.
ಜ.30ರಂದು ಸಂಜೆ 6ಕ್ಕೆ ಮಹಿಳಾ ಗೋಷ್ಠಿ ನಡೆಯಲಿದೆ. ಬೌದ್ಧ ಬಿಕ್ಕು ತೇನ್ಸಿಂಗ್ ಯೆಶಿ, ಮೌಲಾನ ಮಹಮ್ಮದ್ ಅನ್ವರ್ ಆಸಾದಿ ಆಶೀರ್ವಚನ ನೀಡಲಿದ್ದಾರೆ. ಧಾರ್ಮಿಕ ದತ್ತಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಎಸ್.ವಿ.ರಾಮಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ವಿಜಯಲಕ್ಷ್ಮಿ ಬಾಳೆಕುಂದ್ರಿ, ನಾಗಶ್ರೀ ತ್ಯಾಗರಾಜ್ ಇಂದುಶ್ರೀ, ಡಾ.ಸಿ.ಎನ್.ಪಾಟೀಲ ವಿಷಯ ಮಂಡನೆ ಮಾಡಲಿದ್ದಾರೆ.
ಜ. 31ರಂದು ಸಂಜೆ 6ಕ್ಕೆ ಕೃಷಿಕರ ಚಿಂತನಾ ಗೋಷ್ಠಿ ಇದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಜಿ.ಕರುಣಾಕರ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಫೆ.1ರಂದು ಸಾಹಿತ್ಯ ಗೋಷ್ಠಿ ಇದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪಾಲ್ಗೊಳ್ಳಲಿದ್ದಾರೆ. ಸಾಹಿತಿ ಡಾ.ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಫೆ.2ರಂದು ಯುವ ಚಿಂತನ ಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ವಿ.ಸುನೀಲ್ಕುಮಾರ್, ಆನಂದ್ ಸಿಂಗ್, ಬಿ.ಸಿ.ನಾಗೇಶ್ ಪಾಲ್ಗೊಳ್ಳಲಿದ್ದಾರೆ. ಫೆ.3ರಂದು ಕನಕಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಸಂಸದ ದೇವೇಂದ್ರಪ್ಪ ಪಾಲ್ಗೊಳ್ಳಲಿದ್ದಾರೆ.
ಫೆ.4ರಂದು ತೋಂಟದ ಸಿದ್ದರಾಮ ಸ್ವಾಮೀಜಿ, ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗವಹಿಸಲಿದ್ದಾರೆ. ಫೆ.5ರಂದು ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸದ್ಧರ್ಮ ಸಿಂಹಾಸನಾರೋಹಣ ಮಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ಜೆ.ಸಿ.ಮಾಧುಸ್ವಾಮಿ, ಮುರುಗೇಶ ನಿರಾಣಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ ಪಾಲ್ಗೊಳ್ಳಲಿದ್ದಾರೆ. ಡಾ.ಗುರುರಾಜ ಕರಜಗಿ ಉಪನ್ಯಾಸ ನೀಡಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.