ಮೊಳಕಾಲ್ಮುರು: ರಾಜ್ಯದಲ್ಲಿ ವಿವಿಧ ಕಾರಣಗಳಿಂದ ಶೇ 12ರಷ್ಟು ಅರಣ್ಯ ನಾಶವಾಗಿದ್ದು, ಇದನ್ನು ಮುಂದಿನ 5 ವರ್ಷಗಳಲ್ಲಿ ಸರಿಪಡಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಸುರೇಶ್ ಹೇಳಿದರು.
ತಾಲ್ಲೂಕಿನ ದೇವಸಮದ್ರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಬುಧವಾರ ನಡೆದ ವನ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಒಟ್ಟು ಭೂ ಪ್ರದೇಶದಲ್ಲಿ ಶೇ 33ರಷ್ಟು ಪ್ರದೇಶದಲ್ಲಿ ಅರಣ್ಯವಿರಬೇಕು. ಆದರೆ, ಹಲವು ಕಾರಣಗಳಿಂದ ಇದು ಶೇ 21ಕ್ಕೆ ಕುಸಿತವಾಗಿದೆ. ಮುಂದಿನ ಪೀಳಿಗೆ ಮೇಲೆ ಇದರ ದುಷ್ಪರಿಣಾಮ ಬೀರಬಾರದು ಎಂದು ರಾಜ್ಯ ಸರ್ಕಾರ ಪ್ರತಿ ವರ್ಷ 5 ಕೋಟಿ ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ರಮ ಜಾರಿಗೆ ತಂದಿದ್ದು, ಮುಂದಿನ 5 ವರ್ಷಗಳಲ್ಲಿ ಒಟ್ಟು 25 ಕೋಟಿ ಸಸಿಗಳನ್ನು ನೆಡಲಾಗುವುದು ಎಂದು ಹೇಳಿದರು.
ವಸತಿ ಶಾಲೆ ಆವರಣದಲ್ಲಿ 300 ಸಸಿಗಳನ್ನು ನೆಡಲಾಯಿತು. ಪ್ರಭಾರಿ ವಲಯ ಅರಣ್ಯಾಧಿಕಾರಿ ಹಸನ್ ಭಾಷಾ, ಸಹಾಯಕ ವಲಯ ಅರಣ್ಯಾಧಿಕಾರಿ ನಿಂಗರಾಜ್ ಮತ್ತು ಸಿಬ್ಬಂದಿ, ವಸತಿ ಶಾಲೆ ಪ್ರಾಂಶುಪಾಲ ನಾಗೇಂದ್ರಪ್ಪ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.