ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲುಷಿತ ನೀರು ಕುಡಿದು ಮಹಿಳೆ ಸಾವು: ಮಾಹಿತಿ ಪಡೆದ ಮುಖ್ಯಮಂತ್ರಿ, ತನಿಖಾ ತಂಡ ರಚನೆ

Published 2 ಆಗಸ್ಟ್ 2023, 11:30 IST
Last Updated 2 ಆಗಸ್ಟ್ 2023, 11:30 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟು ಹಲವರು ಅಸ್ವಸ್ಥರಾಗಿರುವ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಯಿಂದ ಬುಧವಾರ ಮಾಹಿತಿ ಪಡೆದಿದ್ದಾರೆ. ತಪ್ಪಿತಸ್ಥರನ್ನು ಪತ್ತೆ ಮಾಡಿ ಶಿಸ್ತುಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸೂಚನೆಯ ಮೇರೆಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ನೇತೃತ್ವದಲ್ಲಿ ತನಿಖಾ ತಂಡವೊಂದನ್ನು ರಚಿಸಲಾಗಿದೆ. ಮೂರು ದಿನಗಳ ಒಳಗಾಗಿ ವರದಿ ನೀಡುವಂತೆ ಕಾಲಮಿತಿ ನಿಗದಿಪಡಿಸಲಾಗಿದೆ.

‘ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ಕೇಳಿದ್ದರು. ಕವಾಡಿಗರಹಟ್ಟಿಯ ಪರಿಸ್ಥಿತಿಯನ್ನು ಸಂಪೂರ್ಣವಾಗಿ ವಿವರಿಸಲಾಗಿದೆ. ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸೂಚನೆಯ ಮೇರೆಗೆ ತನಿಖಾ ತಂಡ ರಚನೆಯಾಗಿದೆ’ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್‌.ಜೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಯುವಕ ಸಾವು; ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದಿರುವ ಶಂಕೆ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಸೇರಿ ಅನೇಕರು ತನಿಖಾ ತಂಡದಲ್ಲಿದ್ದಾರೆ. ಘಟನೆಯ ಕುರಿತು ವಿಶ್ಲೇಷಣೆ ಮಾಡಿ ತುರ್ತು ತನಿಖಾ ವರದಿಯನ್ನು ನೀಡಲಿದ್ದಾರೆ. ಇದರ ಆಧಾರದ ಮೇರೆಗೆ ತಪ್ಪಿತಸ್ಥರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.

ನಗರ ವ್ಯಾಪ್ತಿಯ ಎಲ್ಲ ಓವರ್‌ ಹೆಡ್‌ ಟ್ಯಾಂಕ್‌ಗಳನ್ನು ಸ್ವಚ್ಛತೆ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 15 ದಿನಕ್ಕೊಮ್ಮೆ ನೀರಿನ ಶುದ್ಧತೆ ಖಚಿತಪಡಿಸಿಕೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT