ಚಿತ್ರದುರ್ಗ: ವಾಂತಿ–ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ದಾವಣಗೆರೆಯ ಎಸ್ಎಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದ ಪರಿಣಾಮವಾಗಿ ಈ ಸಾವು ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಚಿತ್ರದುರ್ಗ ತಾಲ್ಲೂಕಿನ ವಡ್ಡರಸಿದ್ದವ್ವನಹಳ್ಳಿಯ ಪ್ರವೀಣ್ (25) ಮೃತ ಯುವಕ. ಕವಾಡಿಗರಹಟ್ಟಿಯ ನೆಂಟರ ಮನೆಗೆ ಈಚೆಗೆ ಬಂದುಹೋಗಿದ್ದ ಎನ್ನಲಾಗುತ್ತಿದೆ.
ಪ್ರವೀಣ್ ಸಂಬಂಧಿಕರ ಮನೆ ಕವಾಡಿಗರಹಟ್ಟಿಯಲ್ಲಿದೆ. ಭಾನುವಾರ ಇಲ್ಲಿಗೆ ಬಂದಿದ್ದ ಯುವಕ, ಸೋಮವಾರ ಊರಿಗೆ ಮರಳಿದ್ದ. ಆ ಬಳಿಕ ಪ್ರವೀಣ್ ಅವರಿಗೆ ವಾಂತಿ–ಭೇದಿ ಕಾಣಿಸಿಕೊಂಡಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವಕನನ್ನು ದಾವಣಗೆರೆಯ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.
‘ವಡ್ಡರಸಿದ್ದವ್ವನಹಳ್ಳಿಯ ಪ್ರವೀಣ್ ಎಂಬುವರು ಮೃತಪಟ್ಟಿರುವ ಮಾಹಿತಿ ಸಿಕ್ಕಿದೆ. ಕವಾಡಿಗರಹಟ್ಟಿಗೆ ಬಂದು ಹೋಗಿದ್ದರು ಎನ್ನಲಾಗುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.