ಚಿತ್ರದುರ್ಗ: ಒಂದೂವರೆ ತಿಂಗಳಿಂದ ಮತದಾರರ ಮನೆಬಾಗಿಲಿಗೆ ಅಲೆದು ಮತಭಿಕ್ಷೆ ಕೇಳಿದ ಅಭ್ಯರ್ಥಿಗಳಲ್ಲಿ ಕೆಲವರಿಗೆ ತಮ್ಮದೇ ಮತವನ್ನು ಹಾಕಿಕೊಳ್ಳಲು ಶನಿವಾರ ಸಾಧ್ಯವಾಗಲಿಲ್ಲ. ಕ್ಷೇತ್ರ ಬದಲಾವಣೆ ಮಾಡಿರುವುದು ಹಾಗೂ ಮತ್ತೊಂದೆಡೆ ನೆಲೆಸಿರುವುದು ಇದಕ್ಕೆ ಪ್ರಮುಖ ಕಾರಣವಾಗಿದ್ದರೂ ಮತ ಹಾಕಿಕೊಳ್ಳಲಾಗದ ಪರಿಸ್ಥಿತಿ ಅಭ್ಯರ್ಥಿಗಳನ್ನು ಕಾಡಿತು.
ತೀವ್ರ ಕುತೂಹಲ ಕೆರಳಿಸಿದ ಮೊಳಕಾಲ್ಮುರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮೂಲತಃ ಬಳ್ಳಾರಿಯ ನಿವಾಸಿ. ದೇವಿನಗರದ 34ನೇ ವಾರ್ಡ್ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಇವರ ಹೆಸರಿದೆ. ಚಿತ್ರನಟರನ್ನು ಕರೆತಂದು ರೋಡ್ ಷೋ ನಡೆಸಿ ಮತದಾರರನ್ನು ಸೆಳೆಯಲು ಪ್ರಯತ್ನಿಸಿದ ಶ್ರೀರಾಮುಲು, ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯಲ್ಲಿ
ಮತ ಚಲಾಯಿಸಲಿಲ್ಲ.
ಚಳ್ಳಕೆರೆ ಮೀಸಲು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ರವೀಶಕುಮಾರ್ ಕೂಡ ಇದೇ ಪರಿಸ್ಥಿತಿ ಎದುರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಇವರು ಸೇರ್ಪಡೆಗೊಂಡಿದ್ದಾರೆ.
ಚಿತ್ರದುರ್ಗದ ಜೆಡಿಎಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಅವರ ಹೆಸರು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್.ಎ.ಷಣ್ಮುಖಪ್ಪ ಅವರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರ. ಹಿರಿಯೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಅವರು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿವಾಸಿ. ಕಾಂಗ್ರೆಸ್ ಅಭ್ಯರ್ಥಿ ಡಿ.ಸುಧಾಕರ್ ಸಹ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರ.
ಬೆಂಗಳೂರಿನ ರಾಜಾಜಿನಗರ ಕ್ಷೇತ್ರ ವ್ಯಾಪ್ತಿಯ ಮತದಾರರಾಗಿರುವ ಶಶಿಕುಮಾರ್ ಅವರೂ ಹೊಸದುರ್ಗದಲ್ಲಿ ಮತ ಚಲಾವಣೆ ಮಾಡಲಿಲ್ಲ. ಇವರು ಜೆಡಿಎಸ್ ಪಕ್ಷದಿಂದ ಹೊಸದುರ್ಗದಲ್ಲಿ ಕಣಕ್ಕೆ ಇಳಿದಿದ್ದಾರೆ.
ಹೊಳಲ್ಕೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಎಂ.ಚಂದ್ರಪ್ಪ ಅವರ ಹೆಸರು ಕೂಡ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.