ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನೂಗಳ ಮಹಾತಾಯಿ ಸಂವಿಧಾನ

ನಿವೃತ್ತ ನ್ಯಾಯಮೂರ್ತಿ ಎಚ್.ಎಸ್.ನಾಗಮೋಹನದಾಸ್
Last Updated 1 ಆಗಸ್ಟ್ 2019, 12:02 IST
ಅಕ್ಷರ ಗಾತ್ರ

ವಿಜಯಪುರ: ‘ಎಲ್ಲ ಕಾನೂನೂಗಳ ಮಹಾತಾಯಿ ನಮ್ಮ ಸಂವಿಧಾನ. ಭಾರತದ ಸಂವಿಧಾನ ಇಡೀ ಪ್ರಪಂಚದ ಗಮನವನ್ನು ಸೆಳೆದಿರುವುದು ಹೆಮ್ಮೆಯ ವಿಷಯ’ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎಸ್.ನಾಗಮೋಹನದಾಸ್ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಆರ್.ವಿ.ನೆನಪಿನ ಸಂಸ್ಕೃತಿ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರಚಾರ ಅಭಿಯಾನದ ಅಡಿಯಲ್ಲಿ ಗುರುವಾರ ಹಮ್ಮಿಕೊಂಡದ್ದ ‘ಸಂವಿಧಾನ ಓದು’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಭಾರತ ಸರ್ಕಾರದ ಆಡಳಿತ ವ್ಯವಸ್ಥೆಯು ಸಂವಿಧಾನದ ಮೇಲೆ ನಿಂತಿದೆ. ದೇಶದಲ್ಲಿ ಅಭಿವೃದ್ಧಿ ಸಾಧಿಸಲು, ಮಹಿಳೆಯರು, ದಲಿತರು, ಬುಡಕಟ್ಟು ಸಮುದಾಯದವರು ಸೇರಿ ಎಲ್ಲಾ ವರ್ಗೀಯ ಜನರು ತಲೆ ಎತ್ತಿ ಬದುಕಲು ಸಂವಿಧಾನ ಅವಕಾಶ ಕಲ್ಪಿಪಸಿಕೊಟ್ಟಿದೆ. ನಮ್ಮ ಸಂವಿಧಾನ ಭ್ರಾತೃತ್ವ, ಸಹೋದರತೆ, ಸಮಾನತೆಯ ನೆಲೆಯಿಂದ ಕೂಡಿದೆ’ ಎಂದು ಅಭಿಪ್ರಾಯಪಟ್ಟರು.

‘ನಮ್ಮ ದೇಶ ಅತೀ ವೇಗದಲ್ಲಿ ಆರ್ಥಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ, ಮುಂತಾದ ಎಲ್ಲಾ ರಂಗಗಳಲ್ಲಿಯೂ ಬೆಳೆಯುತ್ತಿರಲು ಸಂವಿಧಾನವು ಬಹು ಮುಖ್ಯ ಪಾತ್ರ ವಹಿಸುತ್ತಿದೆ. ನಮ್ಮ ಜೀವನದಲ್ಲಿ ನಮಗೆ ಅವಶ್ಯವಿರುವ ಎಲ್ಲಾ ಹಕ್ಕುಗಳನ್ನು ಒದಗಿಸಿದೆ. ಅಂತಹ ಸಂವಿಧಾನವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಬೇಕಾಗಿದೆ’ ಎಂದು ಹೇಳಿದರು.

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಮಾತನಾಡಿ, ‘ಸಂವಿಧಾನವು ಧ್ವನಿ ಇರದವರಿಗೆ ಧ್ವನಿಯಾಗುವ ಮೂಲಕ ಅವರ ಹಕ್ಕುಗಳನ್ನು ತಂದುಕೊಟ್ಟಿದೆ. ಅಂಥ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನಾವೆಲ್ಲ ಸದಾ ಋಣಿಯಾಗಿರಬೇಕು. ನಮ್ಮ ದೇಶದಲ್ಲಿ ಹಲವಾರು ಜಾತಿ, ಧರ್ಮ, ಮತ, ಪಂಗಡಗಳಿದ್ದರೂ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಸ್ವತಂತ್ರವಾಗಿ ಸಂತಸದಿಂದ ಬದುಕಲು ಸಂವಿಧಾನವೇ ಕಾರಣವಾಗಿವೆ’ ಎಂದರು.

‘ಸಂವಿಧಾನ ಓದು’ ಅಭಿಯಾನದ ನೋಡಲ್ ಅಧಿಕಾರಿ ಡಾ.ವಿಠ್ಠಲ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್‍ಎಸ್‍ಎಸ್ ಕೋಶದ ಸಂಯೋಜನಾಧಿಕಾರಿ ಪ್ರೊ.ಬಿ.ಎಲ್.ಲಕ್ಕಣ್ಣವರ ಸ್ವಾಗತಿಸಿದರು. ಸಮಾಜಕಾರ್ಯ ವಿಭಾಗದ ಡಾ.ಕಲಾವತಿ ಕಾಂಬಳೆ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT