ವಿಜಯಪುರ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಕಲ್ಲು ಎತ್ತಿ ಹಾಕಿ ತಂದೆಯನ್ನೇ ಕೊಲೆ ಮಾಡಿದ್ದ ಮಗನಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ.
ಕೊಲ್ಹಾರ ಪಟ್ಟಣದ ರಾಚಪ್ಪ ನಾಗಪ್ಪ ಗಡ್ಡಿ ಶಿಕ್ಷೆಗೆ ಗುರಿಯಾದವರು. ಇವರು 2017ರಲ್ಲಿ ಇವರ ತಂದೆ ನಾಗಪ್ಪ ಅವರನ್ನು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವೆಂಕಟೇಶ ಜೋಶಿ ಅವರು ಜೀವಾವಧಿ ಶಿಕ್ಷೆ ಮತ್ತು ₹ 26 ಸಾವಿರ ದಂಡ ವಿಧಿಸಿ ತೀರ್ಪು ನೀಡಿದರು.
ಸರ್ಕಾರದ ಪರವಾಗಿ 1ನೇ ಹೆಚ್ಚುವರಿ ಪ್ರಭಾರ ಸರ್ಕಾರಿ ಅಭಿಯೋಜಕ ಕೆ.ಕೆ.ಕುಲಕರ್ಣಿ ವಾದ ಮಂಡಿಸಿದ್ದರು.