ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 225 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ಮಂಗಳವಾರ ಲಭಿಸಿರುವ ಪರೀಕ್ಷಾ ವರದಿಗಳಿಂದ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,393ಕ್ಕೆ ತಲುಪಿದೆ.
‘ಮಂಗಳೂರು ತಾಲ್ಲೂಕಿನ 147, ಬೆಳ್ತಂಗಡಿ ತಾಲ್ಲೂಕಿನ 29, ಬಂಟ್ವಾಳ ತಾಲ್ಲೂಕಿನ 19, ಪುತ್ತೂರು ತಾಲ್ಲೂಕಿನ 16, ಸುಳ್ಯ ತಾಲ್ಲೂಕಿನ ನಾಲ್ವರು ಮತ್ತು ಮೂಡುಬಿದಿರೆ ತಾಲ್ಲೂಕಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯ ಹೊರಗಿನ ಒಂಭತ್ತು ಜನರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಶೀತ ಜ್ವರದಿಂದ ಬಳಲುತ್ತಿದ್ದ (ಐಎಲ್ಐ) 67 ಜನರು, ಉಸಿರಾಟದ ತೀವ್ರ ತೊಂದರೆಯಿಂದ (ಎಸ್ಎಆರ್ಐ) ಆಸ್ಪತ್ರೆಗಳಿಗೆ ದಾಖಲಾಗಿದ್ದ 20 ಮಂದಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 60 ಮಂದಿ, ವಿದೇಶದಿಂದ ಹಿಂದಿರುಗಿದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಉಳಿದ 77 ಜನರಿಗೆ ಯಾವ ಮೂಲದಿಂದ ಸೋಂಕು ತಗುಲಿದೆ ಎಂಬುದನ್ನು ಪತ್ತೆಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಈವರೆಗೆ ಮಂಗಳೂರು ತಾಲ್ಲೂಕಿನಲ್ಲಿ 4,541 ಪ್ರಕರಣಗಳು ಪತ್ತೆಯಾಗಿವೆ. ಬಂಟ್ವಾಳ ತಾಲ್ಲೂಕಿನಲ್ಲಿ 590, ಬೆಳ್ತಂಗಡಿ ತಾಲ್ಲೂಕಿನಲ್ಲಿ 289, ಪುತ್ತೂರು ತಾಲ್ಲೂಕಿನಲ್ಲಿ 283, ಮೂಡುಬಿದಿರೆ ತಾಲ್ಲೂಕಿನಲ್ಲಿ 94, ಮೂಲ್ಕಿ ತಾಲ್ಲೂಕಿನಲ್ಲಿ 90, ಸುಳ್ಯ ತಾಲ್ಲೂಕಿನಲ್ಲಿ 76 ಮತ್ತು ಕಡಬ ತಾಲ್ಲೂಕಿನಲ್ಲಿ 53 ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರೀಕ್ಷೆಗೊಳಗಾಗಿದ್ದ ಹೊರ ಜಿಲ್ಲೆಗಳು ಮತ್ತು ಹೊರ ರಾಜ್ಯಗಳ 377 ಜನರಿಗೆ ಸೋಂಕು ದೃಢಪಟ್ಟಿದೆ.
73 ಮಂದಿ ಗುಣಮುಖ:ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತು ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಪ್ರತ್ಯೇಕ ವಾಸದಲ್ಲಿದ್ದ 73 ಜನರು ಗುಣಮುಖರಾಗಿರುವುದು ಮಂಗಳವಾರ ಖಚಿತಪಟ್ಟಿದೆ. ಅವರಿಗೆ ಹೋಂ ಕ್ವಾರಂಟೈನ್ ಮುಂದುವರಿಸಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 2,927 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈಗ 3,061 ಸಕ್ರಿಯ ಪ್ರಕರಣಗಳಿವೆ. ಅವರು ವಿವಿಧ ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಪ್ರತ್ಯೇಕ ವಾಸದಲ್ಲಿದ್ದಾರೆ.
ನಾಲ್ವರ ಸಾವು ಘೋಷಣೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಾಗಿದ್ದ ನಾಲ್ವರು ಮೃತಪಟ್ಟಿರುವುದನ್ನು ಜಿಲ್ಲಾಧಿಕಾರಿ ಮಂಗಳವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 180ಕ್ಕೆ ತಲುಪಿದೆ.
‘ಮರಣ ಘೋಷಿಸಿರುವ ನಾಲ್ವರೂ ಮಂಗಳೂರು ತಾಲ್ಲೂಕಿನವರು. ಅವರೆಲ್ಲರಿಗೂ ಗಂಭೀರ ಸ್ವರೂಪದ ಅನ್ಯ ಕಾಯಿಲೆಗಳಿದ್ದವು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.