ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರಲ್ಲಿರುವ ಚಾರ್ಮಾಡಿ ಘಾಟಿಗೆ ಆಗಸ್ಟ್ 11ರ ಮಧ್ಯರಾತ್ರಿಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಚಾರ್ಮಾಡಿ ಘಾಟಿಯ ಹಲೆವೆಡೆ ಭೂಕುಸಿತ ಸಂಭವಿಸಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಚಿಕ್ಕಮಗಳೂರು ಭಾಗದಿಂದ ವಾಹನ ಸಂಚಾರ ನಿಷೇಧಿಸಿ ಶುಕ್ರವಾರ ಆದೇಶ ಹೊರಡಿಸಲಾಗಿತ್ತು. ಅದಕ್ಕೆ ಪೂರಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಪ್ರವೇಶ ನಿಷೇಧಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸಂಚರಿಸುವವರು ಉಜಿರೆ– ಧರ್ಮಸ್ಥಳ– ಕೊಕ್ಕಡ– ಗುಂಡ್ಯ ಶಿರಾಡಿ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಹೋಗಬಹುದು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಹ್ಯಾಂಡ್ ಪೋಸ್ಟ್– ಜನ್ನಾಪುರ– ಆನೆಮಹಲ್– ಶಿರಾಡಿ– ಗುಂಡ್ಯ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಬರಬಹುದು ಎಂದು ಜಿಲ್ಲಾಧಿಕಾರಿ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.