ಸುಳ್ಯ: ‘ತಾಲ್ಲೂಕಿನ ನಾಲ್ಕೂರನ್ನು ಪ್ರತ್ಯೇಕ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಬೇಕು ಎಂಬ ಬೇಡಿಕೆಯ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದು ಗಮನ ಸೆಳೆಯುತ್ತೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಭರವಸೆ ನೀಡಿದರು.
ನಾಲ್ಕೂರಿನಲ್ಲಿ ‘ಜಿಲ್ಲಾಧಿಕಾರಿ ನಡೆ– ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಅವರು ಶನಿವಾರ ಮಾತನಾಡಿದರು. ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಲಿಕಲಿ ಕೊಠಡಿಯ ದುರಸ್ತಿಗೆ, ಊರಿನ ಅಪಾಯಕಾರಿ ಮರಗಳ ತೆರವಿಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಗ್ರಾಮಸ್ಥರಿಂದ ವಿವಿಧ ಅಹವಾಲುಗಳನ್ನು ಸ್ವೀಕರಿಸಿದ ಅವರು, ‘ಸರ್ಕಾರದ ವಿವಿಧ ಇಲಾಖೆಗಳಿಂದ ಜನರಿಗೆ ಆಗಬೇಕಿರುವ ಕೆಲಸ ಕಾರ್ಯಗಳನ್ನು ಸುಗಮವಾಗಿ ಗ್ರಾಮ ಮಟ್ಟದಲ್ಲಿಯೇ ಮಾಡಿಕೊಡಲು ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದೆ. ಗ್ರಾಮಸ್ಥರ ಅಹವಾಲುಗಳನ್ನು ಸ್ಥಳದಲ್ಲಿಯೇ ಆಲಿಸಿ, ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಕೆಲವೊಂದು ಕಠಿಣ ಸಮಸ್ಯೆಗಳಿದ್ದರೆ ಅವುಗಳನ್ನು ಕ್ರಮಕ್ಕಾಗಿ ಸರ್ಕಾರಕ್ಕೆ ಕಳುಹಿಸಲಾಗುತ್ತಿದೆ’ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್, ಡಿಡಿಎಲ್ಆರ್ ನಿರಂಜನ್, ಗುತ್ತಿಗಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇವತಿ ಆಚಳ್ಳಿ ಉಪಾಧ್ಯಕ್ಷೆ ಪ್ರಮೀಳಾ ಇದ್ದರು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.