ಮಂಗಳೂರು: ನಗರದ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೊಂಬಿ ಪ್ರಕರಣವೊಂದರಲ್ಲಿ ಭಾಗಿಯಾಗಿ 18 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಲಾಗಿದೆ.
ಬಗುಳಿಪಾಡಿ ಸೂರಲ್ಪಾಡಿ ನಿವಾಸಿ ಫಯಾಝ್ ಆಲಂ (43) ಬಂಧಿತ ಆರೋಪಿ. ಈತ 2000ನೇ ಇಸವಿಯಲ್ಲಿ ನಡೆದ ದೊಂಬಿ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾನೆ. 18 ವರ್ಷಗಳಿಂದ ವಿಚಾರಣೆಗೆ ಹಾಜರಾಗಿರಲಿಲ್ಲ. ನ್ಯಾಯಾಲಯ ಈತನ ಬಂಧನಕ್ಕೆ ವಾರೆಂಟ್ ಹೊರಡಿಸಿತ್ತು.
‘ಬಜ್ಪೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದ ತಂಡ ಆರೋಪಿಯ ಪತ್ತೆಗೆ ಪ್ರಯತ್ನಿಸುತ್ತಿದ್ದಾಗ ಫಯಾಝ್ ಆಲಂ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರುವ ಮಾಹಿತಿ ಲಭಿಸಿತ್ತು. ತಕ್ಷಣವೇ ಆತನ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿಮಾಡಿ, ದೇಶದ ಎಲ್ಲ ವಿಮಾನ ನಿಲ್ದಾಣಗಳಿಗೂ ರವಾನಿಸಲಾಗಿತ್ತು. ಶುಕ್ರವಾರ ಆರೋಪಿಯು ದೆಹಲಿ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ಪರಾರಿಯಾಗಲು ಹೊರಟಿದ್ದ. ಲುಕ್ ಔಟ್ ನೋಟಿಸ್ ಆಧರಿಸಿ ವಲಸೆ ವಿಭಾಗದ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದರು’ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ತಿಳಿಸಿದ್ದಾರೆ.
ಬಳಿಕ ಬಜ್ಪೆ ಠಾಣೆ ಸಬ್ ಇನ್ಸ್ಪೆಕ್ಟರ್ ಶಂಕರ್ ನಾಯರಿ, ಸಹಾಯಕ ಸಬ್ ಇನ್ಸ್ಪೆಕ್ಟರ್ ರಾಮಚಂದ್ರ ಮತ್ತು ಸಿಬ್ಬಂದಿ ದೆಹಲಿಗೆ ತೆರಳಿ ಆರೋಪಿಯನ್ನು ಬಂಧಿಸಿ ಕರೆತಂದಿದ್ದಾರೆ. ಆಲಂನನ್ನು ಶನಿವಾರ ನಗರದ ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.