ಪುತ್ತೂರು: ‘ಆದಿಚುಂಚನಗಿರಿ ಜಗದ್ಗುರು ಬಾಲಗಂಗಾಧರನಾಥ ಸ್ವಾಮೀಜಿ ಅವರು ಜಗತ್ತಿಗೆ ನೀಡಿದ ಕೊಡುಗೆಗಳನ್ನು ಜ್ಞಾಪಿಸುವ ಮತ್ತು ಸೇವಾ ಕಾರ್ಯಗಳನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಅವರ 78ನೇ ಜಯಂತ್ಯುತ್ಸವವನ್ನು ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ಗದ್ದೆಯಲ್ಲಿ ಜ.22ರಂದು ಆಯೋಜಿಸಲಾಗಿದೆ’ ಎಂದು ಕಾರ್ಯಕ್ರಮ ಸ್ವಾಗತ ಸಮಿತಿ ಗೌರವಾಧ್ಯಕ್ಷ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದರು.
ಸ್ವಾಮೀಜಿಯ ಜಯಂತ್ಯುತ್ಸವದ ಪ್ರಯುಕ್ತ ಪುತ್ತೂರಿನ ಒಕ್ಕಲಿಗ ಗೌಡ ಸೇವಾ ಸಂಘದ ಸಭಾಭವನದಲ್ಲಿ ಮಂಗಳವಾರ ನಡೆದ ಪೂರ್ವ ತಯಾರಿ ಸಭೆಯಲ್ಲಿ ಅವರು ಮಾತನಾಡಿದರು.
‘ಸ್ವಾಮೀಜಿಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ’ ಎಂದು ಹೇಳಿದರು.
ಕಾರ್ಯಕ್ರಮವನ್ನು ಜಾತ್ಯತೀತವಾಗಿ, ಪಕ್ಷಾತೀತವಾಗಿ, ರಾಜಕೀಯರಹಿತವಾಗಿ ಸಮಾಜಮುಖಿ ಕಾರ್ಯಕ್ರಮವಾಗಿ ಜೋಡಣೆ ಮಾಡಲಾಗುತ್ತಿದೆ. ಇದು ಒಕ್ಕಲಿಗ ಗೌಡ ಸಮುದಾಯಕ್ಕೆ ಮಾತ್ರ ಸೀಮಿತವಾದ ಕಾರ್ಯಕ್ರಮ ಅಲ್ಲ. ಪ್ರತೀ ಮನೆಯವರೂ ಪಾಲುದಾರರಾಗಬೇಕು’ ಎಂದು ಮನವಿ ಮಾಡಿದರು.