ಮಂಗಳೂರು: ಭಾರತ್ ಬಂದ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆತಂಕದ ನಡುವೆಯೂ ಮಂಗಳೂರಿನಲ್ಲಿ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗಿಳಿದಿದ್ದು, ಆಟೋ ರಿಕ್ಷಾಗಳ ಸಂಚಾರ ಎಂದಿನಂತೆ ಇತ್ತು.
ಸೆಂಟ್ರಲ್ ಮಾರುಕಟ್ಟೆಯಲ್ಲಿ ವಹಿವಾಟು ಸಹಜವಾಗಿತ್ತು. ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಬ್ಯಾಂಕ್ಗಳು ಬಾಗಿಲು ಮುಚ್ಚಿದ್ದವು. ಸರ್ಕಾರಿ ಕಚೇರಿಗಳು ಎಂದಿನಂತೆ ಕೆಲಸ ನಿರ್ವಹಿಸಿದವು.
ಉಡುಪಿ ಜಿಲ್ಲೆಯಲ್ಲಿ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳು ಸಂಚಾರ ಸ್ಥಗಿತಗೊಳಿಸಿದ್ದವು. ಆಟೋ ರಿಕ್ಷಾಗಳು ಸಂಚರಿಸಿದವು. ಬಸ್ ಸ್ಥಗಿತಗೊಳಿಸಲು ಕಾರ್ಮಿಕ ಸಂಘಟನೆಗಳು ಒತ್ತಾಯಿಸಿದ್ದರಿಂದ ಕೆಲಕಾಲ ಬಸ್ ಚಾಲಕರು ಹಾಗೂ ಕಾರ್ಮಿಕ ಸಂಘಟನೆಗಳ ಮಧ್ಯೆ ವಾಗ್ವಾದ ನಡೆಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಿಗ್ಗೆ ಕೆಎಸ್ಆರ್ಟಿಸಿ ಬಸ್ಗಳು ಸಂಚಾರ ನಡೆಸಿದವು. ಆದರೆ, ಮಧ್ಯಾಹ್ನದ ನಂತರ ಬಸ್ಗಳ ಓಡಾಟ ವಿರಳವಾಗಿತ್ತು. ಜಿಲ್ಲೆಯಲ್ಲಿ ಶಾಲಾ–ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆಯೇ ನಡೆದವು. ಬ್ಯಾಂಕ್ಗಳು, ಅಂಚೆ ಕಚೇರಿಗಳು ಬಂದ್ ಆಗಿದ್ದವು. ಜನಜೀವನ ಸಾಮಾನ್ಯವಾಗಿತ್ತು.