ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇರುಮಟ್ಟದಲ್ಲಿ ಬಿಜೆಪಿ ಬಲಪಡಿಸಿ: ನಳಿನ್

ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ
Last Updated 9 ಆಗಸ್ಟ್ 2020, 11:25 IST
ಅಕ್ಷರ ಗಾತ್ರ

ಮಂಗಳೂರು: ‘ನಮ್ಮ ಭದ್ರಕೋಟೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ವಿಸ್ತಾರವಾಗಿ, ಬೇರುಮಟ್ಟದಿಂದ ಬಲಪಡಿಸಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಸೂಚನೆ ನೀಡಿದರು.

ನಗರದ ಕಾವೂರಿನಲ್ಲಿ ಭಾನುವಾರ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

‘ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ನೀವೆಲ್ಲ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಆದಷ್ಟು ಸರ್ಕಾರದ ಯೋಜನೆಗಳನ್ನು ತಳಮಟ್ಟದಲ್ಲಿರುವ ಸಾಮಾನ್ಯ ಜನರಿಗೆ ತಲುಪಿಸಬೇಕು. ಜನರೊಂದಿಗೆ ಇದ್ದು, ಪಕ್ಷವನ್ನು ಬೆಳೆಸಬೇಕು’ ಎಂದರು.

‘ಗ್ರಾಮ ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದೆ. ಇದು ಗ್ರಾಮ ಮತ್ತು ಪಕ್ಷ ಬಲವರ್ಧನೆಯ ಅವಕಾಶ. ಉತ್ತಮವಾಗಿ ಕೆಲಸ ಮಾಡಿ’ ಎಂದು ಹಾರೈಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ‘ಕೋವಿಡ್–19 ಲಾಕ್‌ಡೌನ್‌ ಸಂದರ್ಭದಲ್ಲಿ ಪಕ್ಷ ಮತ್ತು ಪರಿವಾರದ ಸಂಘಟನೆಗಳೆಲ್ಲ ಜೊತೆಯಾಗಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದೇವೆ. ಜನಪ್ರತಿನಿಧಿಗಳ ನೇತೃತ್ವದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ’ ಎಂದು ವಿವರಿಸಿದರು.

ಅಲ್ಲದೇ, ಪಕ್ಷ ಸಂಘಟನೆ ಹಾಗೂ ವಿವಿಧ ಘಟಕಗಳ ರಚನೆ, ಯೋಜನೆಗಳ ಕುರಿತು ಅವರು ಮಾಹಿತಿ ನೀಡಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ ಕುಮಾರ್ ಮಾತನಾಡಿ, ಮುಂದಿನ ಕಾರ್ಯಯೋಜನೆಗಳು, ಪಕ್ಷ ಸಂಘಟನೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಪಕ್ಷದ ಶಾಸಕರು, ಜಿಲ್ಲಾ ಘಟಕದ ಪದಾಧಿಕಾರಿಗಳು, ವಿಧಾನ ಸಭಾ ಕ್ಷೇತ್ರ ಘಟಕಗಳ ಅಧ್ಯಕ್ಷರು ಹಾಗೂ ಪ್ರಮುಖರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT