ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ‘ಡೇಂಜರ್ ಕಾಂಗ್ರೆಸ್’ ಎಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತರು, ಸರ್ಕಾರದ ವಿರುದ್ಧ ಬುಧವಾರ ಇಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು.
ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ‘ಯುವಜನರು, ಹಿಂದೂಗಳ ಜೀವನ ಶೈಲಿಯನ್ನು ಹಾಳುಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಜನರ ಕಿಸೆಯಿಂದ ಹಣವನ್ನು ಪಡೆದು ನೀಡುತ್ತಿರುವ ಗ್ಯಾರಂಟಿ ನಕಲಿಯಾಗಿದೆ. ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಗ್ಯಾರಂಟಿ ಯೋಜನೆಗಳ ಸತ್ಯಾಸತ್ಯತೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ’ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ‘ಜಿಲ್ಲೆಯಾದ್ಯಂತ ಕಾಂಗ್ರೆಸ್ ಡೇಂಜರ್ ಪ್ರತಿಭಟನೆ ನಡೆಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದೆ. ಮತದಾನ ಮಾಡಲು ಹೋಗುವ ಮೊದಲು ಜಿಲ್ಲೆಯ ಜನರು ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಮತ್ತೊಮ್ಮೆ ನೆನಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ವಿನೂತನ ಶೈಲಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ’ ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಪ್ರಮುಖರಾದ ಕ್ಯಾ. ಗಣೇಶ್ ಕಾರ್ಣಿಕ್, ಸುಧೀರ್ ಶೆಟ್ಟಿ ಕಣ್ಣೂರು, ಜಗದೀಶ್ ಶೇಣವ, ದಿವಾಕರ್ ಪಾಂಡೇಶ್ವರ, ಸುದರ್ಶನ್ ಮೂಡುಬಿದಿರೆ, ಪೂರ್ಣಿಮಾ, ಶಕೀಲಾ ಕಾವ, ವಿಜಯಕುಮಾರ್ ಇದ್ದರು.