ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕುಕ್ಕೇಡಿ ಗ್ರಾಮದ ಕುಡ್ತ್ಯಾರುವಿನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಇಬ್ಬರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ನೀಡಿದೆ.
ಸ್ಫೋಟ ಸಂಭವಿಸಿದ ಘಟಕದ ಮಾಲೀಕ ಸಯ್ಯದ್ ಬಶೀರ್ (47) ಹಾಗೂ ಘಟಕಕ್ಕೆ ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸುತ್ತಿದ್ದ ಹಾಸನ ಜಿಲ್ಲೆಯ ವಡ್ಡರಹಳ್ಳಿ ನಿವಾಸಿ ಕಿರಣ್ (24) ಇವರಿಬ್ಬರನ್ನು ವೇಣೂರು ಪೊಲೀಸರು ಸೋಮವಾರ ಬಂಧಿಸಿದ್ದರು.
ಗೋಳಿಯಂಗಡಿಯ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಸಂಬಂಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.