ಮಂಗಳೂರು: ಇಲ್ಲಿನ ಬಜ್ಪೆಯ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಧೇಯ ವ್ಯಕ್ತಿ ಬಾಂಬ್ ಹಾಕುವುದಾಗಿ ಕರೆ ಮಾಡಿದ್ದು, ವಿಮಾನ ನಿಲ್ದಾಣದಲ್ಲಿ ವ್ಯಾಪಕ ತಪಾಸಣೆ ನಡೆಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ್ ರಾವ್ ಅವರ ಮೊಬೈಲ್ಗೆ ಬುಧವಾರ ಮಧ್ಯಾಹ್ನ ಕರೆ ಮಾಡಿದ ವ್ಯಕ್ತಿ, ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಒಡ್ಡಿದ್ದಾನೆ. ಕೂಡಲೇ ಅವರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿದೆ.
‘ಅನಾಮಧೇಯ ವ್ಯಕ್ತಿಯ ನಂಬರ್ ಪತ್ತೆ ಮಾಡಲಾಗಿದೆ. ಆರೋಪಿಯ ಬಂಧನಕ್ಕಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.
‘ನೇರವಾಗಿ ವಿಮಾನ ನಿಲ್ದಾಣಕ್ಕೆ ಯಾವುದೇ ಬೆದರಿಕೆ ಕರೆ ಬಂದಿಲ್ಲ. ಆದರೆ ಈ ಮಾಜಿ ನಿರ್ದೇಶಕರ ಮೊಬೈಲ್ಗೆ ಹುಸಿಬಾಂಬ್ ಕರೆ ಬಂದಿದ್ದು, ಕೂಡಲೇ ತಮ್ಮ ಗಮನಕ್ಕೆ ತಂದಿದ್ದರು. ಪೊಲೀಸರಿಗೆ ಮಾಹಿತಿ ನೀಡಿದ್ದು, ಯಾವುದೇ ಆತಂಕಕಾರಿ ಪರಿಸ್ಥಿತಿ ಇಲ್ಲ’ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.