ಮಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಡುವ ಜತೆಗೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಆಗ್ರಹಿಸಿದರು.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಶ್ವರಪ್ಪ ಅವರಿಗೆ ಶೇ 40 ಕಮಿಷನ್ ನೀಡಬೇಕು ಎಂದು ಆರೋಪಿಸಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಕೆ. ಪಾಟೀಲ್ ಡೆತ್ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹತ್ಯೆಗೆ ಸಮಾನವಾಗಿದೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಈಶ್ವರಪ್ಪ ಅವರನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದರು.
ಹಿಂದೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಿದ್ದ ಜತೆಗೆ, ಆರೋಪ ಎದುರಿಸಿದ ಸಚಿವ ಕೆ.ಜೆ.ಜಾರ್ಜ್ ಅವರಿಂದ ರಾಜೀನಾಮೆ ಪಡೆದಿತ್ತು. ಈ ಪ್ರಕರಣ ಮತ್ತು ಪ್ರಸ್ತುತ ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪ್ರಕರಣವನ್ನು ಹೋಲಿಕೆ ಮಾಡಲಾಗದು. ಸಂತೋಷ್ ಪಾಟೀಲ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಇನ್ನೂ ಗಂಭೀರ ಪ್ರಕರಣವಾಗಿದೆ ಎಂದರು.
ರಾಜ್ಯ ಸರ್ಕಾರದ 40 ಪರ್ಸೆಂಟೇಜ್ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆದರೆ, ಮೋದಿ ಈ ವಿಚಾರವನ್ನು ನಿರ್ಲಕ್ಷಿಸಿದ್ದರಿಂದ ಈಗ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ದೂರಿದರು.