ಬೆಳ್ತಂಗಡಿ: ತಾಲ್ಲೂಕಿನ ಕುತ್ಲೂರಿನ ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ.
ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ.
ಅರಣ್ಯವಾಸಿಗಳು ಈ ಸೇತುವೆ ಮೂಲಕವೇ ಸಂಚಾರ ಮಾಡುತ್ತಿದ್ದರು. ಇದೀಗ ಸೇತುವೆ ಕುಸಿದಿರುವುದರಿಂದ ತೊಂದರೆಯಾಗಿದೆ. ಇನ್ನು ಕಿಲೋಮೀಟರ್ ಗಟ್ಟಲೆ ಕಾಲ್ನಡಿಗೆಯಲ್ಲೇ ಸಾಗಬೇಕಾದ ಅನಿವಾರ್ಯ ನಿರ್ಮಾಣವಾಗಿದೆ.
ಅರಣ್ಯವಾಸಿಗಳಿಗೆ ಸಂಚಾರಿ ವಾಹನದ ಮೂಲಕ ಅಳಂಬ ಪ್ರದೇಶಕ್ಕೆ ಪಡಿತರ ವಿತರಣೆಯಾಗುತ್ತಿತ್ತು. ನಂತರ ಕಾಲ್ನಡಿಗೆಯ ಮೂಲಕವೇ ತಮ್ಮ ಮನೆಗಳಿಗೆ ಪಡಿತರವನ್ನು ಸಾಗಿಸುತ್ತಿದ್ದರು. ಇದೀಗ ಕಾಡಬಾಗಿಲು ಸೇತುವೆ ಕುಸಿತವಾಗಿರುವುದರಿಂದ ಇನ್ನು ಪಡಿತರ ಸೇರಿದಂತೆ ಇನ್ನಿತರ ವಸ್ತುಗಳನ್ನೂ ಕಾಲ್ನಡಿಗೆಯಲ್ಲೇ ಮೂರ್ನಾಲ್ಕು ಕಿಲೋಮೀಟರ್ ಹೆಚ್ಚುವರಿಯಾಗಿ ಹೊತ್ತೊಯ್ಯುವ ಅನಿವಾರ್ಯ ಬರಲಿದೆ. ತುರ್ತು ಸಂದರ್ಭಗಳಲ್ಲೂ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ.
ಕಾಡಬಾಗಿಲು ಸೇತುವೆಯನ್ನು ತಕ್ಷಣವೇ ನಿರ್ಮಾಣ ಮಾಡಬೇಕು. ಅರಣ್ಯವಾಸಿಗಳಿಗೆ ಸಂಚರಿಸಲು ತೊಂದರೆಯಾಗದಂತೆ ಕ್ರಮ ವಹಿಸಲು ಆಡಳಿತ ವ್ಯವಸ್ಥೆ ಮುಂದಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ