ಮಂಗಳೂರು: ಆರೋಗ್ಯಾಧಿಕಾರಿಗಳಿಗೆ ಹೆಚ್ಚಿನ ಕೆಲಸದ ಒತ್ತಡವಿದ್ದರೂ ಸಮರ್ಪಕವಾಗಿ ಕಾರ್ಯನಿರ್ವಹಿ ಸುವುದು ಶ್ಲಾಘನೀಯ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.
ನಗರದ ಬಂದರಿನಲ್ಲಿ ಶುಕ್ರವಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್-19 ಸಂದರ್ಭದಲ್ಲಿ ಸಾರ್ವನಿಕರನ್ನು ರಕ್ಷಣೆ ಮಾಡುವಲ್ಲಿ ಆರೋಗ್ಯ ಇಲಾಖೆಯು ಸಾಕಷ್ಟು ಶ್ರಮವಹಿಸಿರುವುದು ಹೆಮ್ಮಯ ಸಂಗತಿ ಎಂದರು.
ನೂತನವಾಗಿ ಉದ್ಘಾಟನೆ ಗೊಂಡಿರುವ ಆರೋಗ್ಯ ಕೇಂದ್ರವು ಡೊಂಗರಕೇರಿ, ಕೊಡಿಯಾಲ್ಬೈಲ್, ಕಂಬಳ, ಸೆಂಟ್ರಲ್, ಪೋರ್ಟ್, ಬಂದರು, ಕೋರ್ಟ್ ವಾರ್ಡ್ನ ಜನರಿಗೆ ಉಪಯೋಗವಾಗುವಂತೆ ಸರ್ಕಾರವು ಆಸ್ಪತ್ರೆಯನ್ನು ನಿರ್ಮಾಣ ಮಾಡಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಬಂದರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ₹ 45 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, 2019 ರ ಅಂತ್ಯದಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಕೋವಿಡ್–19 ನಿಂದಾಗಿ ಉದ್ಘಾಟನೆ ವಿಳಂಬವಾಗಿದೆ ಎಂದರು.
ಮುಂದಿನ ದಿನದಲ್ಲಿ ಡೊಂಗರಕೇರಿ, ಕೋಡಿಯಾಲ್ಬೈಲ್, ಕಂಬಳ, ಸೆಂಟ್ರಲ್ ವಾರ್ಡ್ಗಳಿಗೆ ಹೊಸದಾಗಿ ಆರೋಗ್ಯ ಕೇಂದ್ರ ನಿರ್ಮಾಣ ಮಾಡುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಾರಿ, ಆರ್ಸಿಎಚ್ ಅಧಿಕಾರಿ ಡಾ.ರಾಜೇಶ್ ಬಿ.ವಿ., ಮಹಾನಗರಪಾಲಿಕೆ ಆರೋಗ್ಯಾಧಿಕಾರಿ ಮಂಜಯ್ಯ ಶೆಟ್ಟಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ಡಾ.ಚಂದ್ರಪ್ರಭ, ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.