ಮಂಗಳೂರು: ಕೇರಳದ ಕಾಸರಗೋಡು ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ‘ಕೋವಿಡ್–19’ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾಣಿಜ್ಯ ವಹಿವಾಟುಗಳು ಸೇರಿದಂತೆ ಎಲ್ಲ ಚಟುವಟಿಕೆಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾತ್ರಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರು, ಉಸ್ತುವಾರಿ ಕಾರ್ಯದರ್ಶಿ ವಿ.ಪೊನ್ನುರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಏಳು ‘ಕೋವಿಡ್–19’ ಪ್ರಕರಣಗಳು ದೃಢಪಟ್ಟಿವೆ. ಕಾಸರಗೋಡಿನಲ್ಲಿ ಒಂದೇ ದಿನ 34 ಹೊಸ ಪ್ರಕರಣಗಳು ದೃಢಪಟ್ಟಿರುವುದು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲೂ ಹೊಸ ಪ್ರಕರಣಗಳು ವರದಿಯಾಗಿವೆ. ಈ ಎಲ್ಲ ಕಾರಣಗಳಿಂದ ಸೋಂಕು ಮತ್ತಷ್ಟು ವ್ಯಾಪಿಸದಂತೆ ತಡೆಯಲು ಒಂದು ದಿನ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ.
‘ಜಿಲ್ಲೆಯಲ್ಲಿ ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸದಿದ್ದರೆ ಮುಂದಿನ ದಿನಗಳು ಅಪಾಯಕಾರಿಯಾಗಲಿವೆ ಎಂಬ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಸೇವೆ ಲಭ್ಯ: ಹಾಲು, ವೈದ್ಯಕೀಯ ಸೇವೆ, ದಿನಪತ್ರಿಕೆ ಅಗತ್ಯವಸ್ತುಗಳ ಸಾಗಣೆಗೆ ಯಾವುದೇ ನಿರ್ಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
TOTAL LOCKDOWN TOMORROW.. please find enclosed detailed press release ..in wake of high cases reported in neighbouring kasaragod..in A high level meeting chaired by Hon district minister in presence of MLA/ MLCs and MP it has been decided to enforce total lockdown..STAY HOME... pic.twitter.com/Ex2dX9Mb9G
— Harsha IPS CP Mangaluru City (@compolmlr) March 27, 2020